ಗೃಹ ವ್ಯವಹಾರಗಳ ಸಚಿವಾಲಯ

ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಶ್ರೀ ಅಮಿತ್ ಶಾ ಅವರು ಜಮ್ಮು ಮತ್ತು ಕಾಶ್ಮೀರದಿಂದ 370 ನೇ ವಿಧಿಯನ್ನು ರದ್ದುಗೊಳಿಸಿದ ನಿರ್ಧಾರವನ್ನು ಎತ್ತಿಹಿಡಿದ ಗೌರವಾನ್ವಿತ ಸರ್ವೋಚ್ಛ ನ್ಯಾಯಾಲಯದ ತೀರ್ಪನ್ನು ಸ್ವಾಗತಿಸಿದ್ದಾರೆ


ಆಗಸ್ಟ್ 5, 2019 ರಂದು, ಜಮ್ಮು ಮತ್ತು ಕಾಶ್ಮೀರದಿಂದ 370 ನೇ ವಿಧಿಯನ್ನು ರದ್ದುಗೊಳಿಸುವ ದೂರದೃಷ್ಟಿಯ ನಿರ್ಧಾರವನ್ನು ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ತೆಗೆದುಕೊಂಡರು

ಇಂದು, ಸರ್ವೋಚ್ಛ ನ್ಯಾಯಾಲಯ ನೀಡಿದ ತೀರ್ಪು 370 ನೇ ವಿಧಿಯನ್ನು ರದ್ದುಗೊಳಿಸಿದ ನಿರ್ಧಾರವು ಸಂಪೂರ್ಣವಾಗಿ ಸಾಂವಿಧಾನಿಕವಾಗಿದೆ ಎಂದು ಸಾಬೀತುಪಡಿಸಿದೆ

370 ನೇ ವಿಧಿಯ ರದ್ದತಿಯ ನಂತರ ಬಡವರು ಮತ್ತು ವಂಚಿತರ ಹಕ್ಕುಗಳನ್ನು ಪುನಃಸ್ಥಾಪಿಸಲಾಗಿದೆ ಮತ್ತು ಪ್ರತ್ಯೇಕತಾವಾದ ಮತ್ತು ಕಲ್ಲು ತೂರಾಟವು ಈಗ ಇತಿಹಾಸವಾಗಿದೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಮ್ಮ ಸರ್ಕಾರವು ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್‌ ನಲ್ಲಿ ಶಾಶ್ವತ ಶಾಂತಿಯನ್ನು ಸ್ಥಾಪಿಸಲು ಮತ್ತು ಈ ಪ್ರದೇಶದ ಸರ್ವತೋಮುಖ ಅಭಿವೃದ್ಧಿಗೆ ಬದ್ಧವಾಗಿದೆ

ಪ್ರವಾಸೋದ್ಯಮ ಮತ್ತು ಕೃಷಿ ಕ್ಷೇತ್ರಗಳಲ್ಲಿನ ಸಮೃದ್ಧಿಯು ಜಮ್ಮು, ಕಾಶ್ಮೀರ ಮತ್ತು ಲಡಾಖ್‌ ನ ನಿವಾಸಿಗಳ ಆದಾಯ ಮಟ್ಟವನ್ನು ಹೆಚ್ಚಿಸಿದೆ

Posted On: 11 DEC 2023 2:50PM by PIB Bengaluru

ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಶ್ರೀ ಅಮಿತ್ ಶಾ ಅವರು ಜಮ್ಮು ಮತ್ತು ಕಾಶ್ಮೀರದಿಂದ 370 ನೇ ವಿಧಿಯನ್ನು ರದ್ದುಗೊಳಿಸಿದ ನಿರ್ಧಾರವನ್ನು ಎತ್ತಿಹಿಡಿದ ಗೌರವಾನ್ವಿತ ಸರ್ವೋಚ್ಛ ನ್ಯಾಯಾಲಯದ ತೀರ್ಪನ್ನು ಸ್ವಾಗತಿಸಿದ್ದಾರೆ.

ಶ್ರೀ ಅಮಿತ್ ಶಾ ಅವರು ಎಕ್ಸ್ ಪ್ಲಾಟ್‌ಫಾರ್ಮ್‌ ನಲ್ಲಿನ ತಮ್ಮ ಪೋಸ್ಟ್‌ನಲ್ಲಿ, “ಭಾರತದ ಗೌರವಾನ್ವಿತ ಸರ್ವೋಚ್ಛ ನ್ಯಾಯಾಲಯವು 370 ನೇ ವಿಧಿಯನ್ನು ರದ್ದುಗೊಳಿಸಿದ ನಿರ್ಧಾರವನ್ನು ಎತ್ತಿ ಹಿಡಿದಿರುವ ತೀರ್ಪನ್ನು ನಾನು ಸ್ವಾಗತಿಸುತ್ತೇನೆ. ಆಗಸ್ಟ್ 5, 2019 ರಂದು, ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು 370 ನೇ ವಿಧಿಯನ್ನು ರದ್ದುಗೊಳಿಸುವ ದೂರದೃಷ್ಟಿಯ ನಿರ್ಧಾರವನ್ನು ತೆಗೆದುಕೊಂಡರು. 370 ನೇ ವಿಧಿಯ ರದ್ದತಿಯ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿ ಮತ್ತು ಸಹಜ ಸ್ಥಿತಿ ಮರಳಿದೆ. ಹಿಂಸಾಚಾರದಿಂದ ನಲುಗಿದ ಕಣಿವೆಯಲ್ಲಿ ಬೆಳವಣಿಗೆ ಮತ್ತು ಅಭಿವೃದ್ಧಿಯು ಮಾನವ ಜೀವನಕ್ಕೆ ಹೊಸ ಅರ್ಥವನ್ನು ತಂದಿದೆ. ಪ್ರವಾಸೋದ್ಯಮ ಮತ್ತು ಕೃಷಿ ಕ್ಷೇತ್ರಗಳಲ್ಲಿನ ಸಮೃದ್ಧಿಯು ಜಮ್ಮು, ಕಾಶ್ಮೀರ ಮತ್ತು ಲಡಾಖ್‌ ನ ನಿವಾಸಿಗಳ ಆದಾಯ ಮಟ್ಟವನ್ನು ಹೆಚ್ಚಿಸಿದೆ. ಇಂದು, ಸರ್ವೋಚ್ಛ ನ್ಯಾಯಾಲಯ ನೀಡಿರುವ ತೀರ್ಪು 370 ನೇ ವಿಧಿಯನ್ನು ರದ್ದುಗೊಳಿಸುವ ನಿರ್ಧಾರವು ಸಂಪೂರ್ಣವಾಗಿ ಸಾಂವಿಧಾನಿಕವಾಗಿದೆ ಎಂದು ಸಾಬೀತುಪಡಿಸಿದೆ.” ಎಂದು ಹೇಳಿದ್ದಾರೆ.

370 ನೇ ವಿಧಿಯನ್ನು ರದ್ದುಪಡಿಸಿದ ನಂತರ ಬಡವರು ಮತ್ತು ವಂಚಿತರ ಹಕ್ಕುಗಳನ್ನು ಪುನಃಸ್ಥಾಪಿಸಲಾಗಿದೆ ಮತ್ತು ಪ್ರತ್ಯೇಕತಾವಾದ ಮತ್ತು ಕಲ್ಲು ತೂರಾಟವು ಈಗ ಇತಿಹಾಸವಾಗಿದೆ ಎಂದು ಕೇಂದ್ರ ಗೃಹ ಸಚಿವರು ಹೇಳಿದ್ದಾರೆ. ಇಡೀ ಪ್ರದೇಶವು ಈಗ ಸುಮಧುರ ಸಂಗೀತ ಮತ್ತು ಸಾಂಸ್ಕೃತಿಕ ಪ್ರವಾಸೋದ್ಯಮದಿಂದ ಪ್ರತಿಧ್ವನಿಸುತ್ತಿದೆ. ಏಕತೆಯ ಬಂಧಗಳು ಬಲಗೊಂಡಿವೆ ಮತ್ತು ಭಾರತದೊಂದಿಗೆ ಸಮಗ್ರತೆಯನ್ನು ಬಲಪಡಿಸಲಾಗಿದೆ. ಇದು ಮತ್ತೊಮ್ಮೆ ಜಮ್ಮು, ಕಾಶ್ಮೀರ ಮತ್ತು ಲಡಾಖ್ ಯಾವಾಗಲೂ ನಮ್ಮ ರಾಷ್ಟ್ರಕ್ಕೆ ಸೇರಿದ್ದು ಮತ್ತು ಹಾಗೆಯೇ ಮುಂದುವರಿಯುತ್ತದೆ ಎಂಬುದನ್ನು ಸಾರುತ್ತದೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ನಮ್ಮ ಸರ್ಕಾರವು ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್‌ ನಲ್ಲಿ ಶಾಶ್ವತ ಶಾಂತಿಯನ್ನು ಸ್ಥಾಪಿಸಲು ಮತ್ತು ಈ ಪ್ರದೇಶದ ಸರ್ವತೋಮುಖ ಅಭಿವೃದ್ಧಿಗೆ ಬದ್ಧವಾಗಿದೆ. ಇದು ಹೊಸ ಪ್ರೋತ್ಸಾಹಗಳೊಂದಿಗೆ ಸ್ಥಳೀಯ ಆರ್ಥಿಕತೆಯನ್ನು ಉತ್ತೇಜಿಸುವುದಾಗಿರಲಿ, ಅತ್ಯಾಧುನಿಕ ಶೈಕ್ಷಣಿಕ ಮೂಲಸೌಕರ್ಯಗಳನ್ನು ನಿರ್ಮಿಸುವುದಾಗಿರಲಿ ಅಥವಾ ಕಲ್ಯಾಣ ಯೋಜನೆಗಳ ಸವಲತ್ತುಗಳೊಂದಿಗೆ ಬಡವರ ಸಬಲೀಕರಣವಾಗಿರಲಿ, ನಾವು ಈ ಪ್ರದೇಶಕ್ಕಾಗಿ ನಮ್ಮ ಎಲ್ಲ ಶಕ್ತಿಯನ್ನು ವಿನಿಯೋಗಿಸುವುದನ್ನು ಮುಂದುವರಿಸುತ್ತೇವೆ ಎಂದು ಅವರು ಹೇಳಿದ್ದಾರೆ.

*****



(Release ID: 1984982) Visitor Counter : 77