ಪ್ರಧಾನ ಮಂತ್ರಿಯವರ ಕಛೇರಿ
ಏಪ್ರಿಲ್ 24ರಂದು ಬಿಹಾರಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
ಬಿಹಾರದ ಮಧುಬನಿಯಲ್ಲಿ ರಾಷ್ಟ್ರೀಯ ಪಂಚಾಯತ್ ರಾಜ್ ದಿನದ ಅಂಗವಾಗಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಪ್ರಧಾನಮಂತ್ರಿ
ಬಿಹಾರದಲ್ಲಿ 13,480 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸುವ, ಶಂಕುಸ್ಥಾಪನೆ ನೆರವೇರಿಸಲಿರುವ ಮತ್ತು ರಾಷ್ಟ್ರಕ್ಕೆ ಸಮರ್ಪಿಸಲಿರುವ ಪ್ರಧಾನಮಂತ್ರಿ
ಬಿಹಾರದಲ್ಲಿ ಅಮೃತ್ ಭಾರತ್ ಎಕ್ಸ್ ಪ್ರೆಸ್ ಮತ್ತು ನಮೋ ಭಾರತ್ ರಾಪಿಡ್ ರೈಲಿಗೆ ಹಸಿರು ನಿಶಾನೆ ತೋರಲಿರುವ ಪ್ರಧಾನಮಂತ್ರಿ
Posted On:
23 APR 2025 6:30PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಏಪ್ರಿಲ್ 24ರಂದು ಬಿಹಾರಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11:45 ಕ್ಕೆ ಅವರು ಮಧುಬನಿಗೆ ಪ್ರಯಾಣಿಸಲಿದ್ದು, ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅವರು 13,480 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸುವ ಜತೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ ಮತ್ತು ಈ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಪ್ರಧಾನಮಂತ್ರಿ ಅವರು ಬಿಹಾರದ ಮಧುಬನಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ರಾಷ್ಟ್ರೀಯ ಪಂಚಾಯತ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ. ಉತ್ತಮವಾಗಿ ಕಾರ್ಯನಿರ್ವಹಿಸುವ ಪಂಚಾಯತ್ ಗಳನ್ನು ಗುರುತಿಸಿ ಪ್ರೋತ್ಸಾಹಿಸಲಿದ್ದಾರೆ.
ಪ್ರಧಾನಮಂತ್ರಿ ಅವರು ಬಿಹಾರದ ಗೋಪಾಲ್ ಗಂಜ್ ಜಿಲ್ಲೆಯ ಹತುವಾದಲ್ಲಿ ಸುಮಾರು 340 ಕೋಟಿ ರೂಪಾಯಿ ಮೌಲ್ಯದ ಎಲ್ ಪಿಜಿ ಬಾಟ್ಲಿಂಗ್ ಘಟಕಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಇದು ಪೂರೈಕೆ ಸರಪಳಿಯನ್ನು ಸುವ್ಯವಸ್ಥಿತಗೊಳಿಸಲು ಮತ್ತು ಬೃಹತ್ ಎಲ್ ಪಿಜಿ ಸಾರಿಗೆಯ ದಕ್ಷತೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ.
ಈ ಪ್ರದೇಶದಲ್ಲಿ ವಿದ್ಯುತ್ ಮೂಲಸೌಕರ್ಯವನ್ನು ಹೆಚ್ಚಿಸಲು, ಪ್ರಧಾನಮಂತ್ರಿ ಅವರು 1,170 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಮತ್ತು ಪರಿಷ್ಕೃತ ವಿತರಣಾ ವಲಯದ ಯೋಜನೆಯಡಿ ಬಿಹಾರದ ವಿದ್ಯುತ್ ಕ್ಷೇತ್ರದಲ್ಲಿ 5,030 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಅನೇಕ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ.
ದೇಶಾದ್ಯಂತ ರೈಲು ಸಂಪರ್ಕವನ್ನು ಹೆಚ್ಚಿಸುವ ಬದ್ಧತೆಗೆ ಅನುಗುಣವಾಗಿ, ಪ್ರಧಾನಮಂತ್ರಿ ಅವರು ಸಹರ್ಸಾ ಮತ್ತು ಮುಂಬೈ ನಡುವಿನ ಅಮೃತ್ ಭಾರತ್ ಎಕ್ಸ್ ಪ್ರೆಸ್, ಜಯನಗರ ಮತ್ತು ಪಾಟ್ನಾ ನಡುವಿನ ನಮೋ ಭಾರತ್ ರಾಪಿಡ್ ರೈಲು ಮತ್ತು ಪಿಪ್ರಾ ಮತ್ತು ಸಹರ್ಸಾ ಮತ್ತು ಸಹರ್ಸಾ ಮತ್ತು ಸಮಸ್ತಿಪುರ ನಡುವಿನ ರೈಲುಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ. ಅವರು ಸುಪಾಲ್ ಪಿಪ್ರಾ ರೈಲು ಮಾರ್ಗ, ಹಸನ್ ಪುರ್ ಬಿಥಾನ್ ರೈಲು ಮಾರ್ಗ ಮತ್ತು ಚಾಪ್ರಾ ಮತ್ತು ಬಗಾಹಾದಲ್ಲಿ ಎರಡು ದ್ವಿಪಥ ರೈಲು ಮೇಲ್ಸೇತುವೆಗಳನ್ನು ಉದ್ಘಾಟಿಸಲಿದ್ದಾರೆ. ಅವರು ಖಗರಿಯಾ-ಅಲೌಲಿ ರೈಲು ಮಾರ್ಗವನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಈ ಯೋಜನೆಗಳು ಸಂಪರ್ಕವನ್ನು ಸುಧಾರಿಸುತ್ತವೆ ಮತ್ತು ಪ್ರದೇಶದ ಒಟ್ಟಾರೆ ಸಾಮಾಜಿಕ-ಆರ್ಥಿಕ ಅಭಿವೃದ್ಧಿಗೆ ಕಾರಣವಾಗುತ್ತವೆ.
ಪ್ರಧಾನಮಂತ್ರಿ ಅವರು ದೀನ್ ದಯಾಳ್ ಅಂತ್ಯೋದಯ ಯೋಜನೆ - ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ (ಡಿಎವೈ-ಎನ್ ಆರ್ ಎಲ್ ಎಂ) ಅಡಿಯಲ್ಲಿ ಬಿಹಾರದ 2 ಲಕ್ಷಕ್ಕೂ ಹೆಚ್ಚು ಸ್ವಸಹಾಯ ಗುಂಪುಗಳಿಗೆ ಸಮುದಾಯ ಹೂಡಿಕೆ ನಿಧಿಯಡಿ ಸುಮಾರು 930 ಕೋಟಿ ರೂ.ಗಳ ಪ್ರಯೋಜನಗಳನ್ನು ವಿತರಿಸಲಿದ್ದಾರೆ.
ಪ್ರಧಾನಮಂತ್ರಿ ಅವರು ಪಿಎಂಎವೈ-ಗ್ರಾಮೀಣದ 15 ಲಕ್ಷ ಹೊಸ ಫಲಾನುಭವಿಗಳಿಗೆ ಮಂಜೂರಾತಿ ಪತ್ರಗಳನ್ನು ಹಸ್ತಾಂತರಿಸಲಿದ್ದಾರೆ ಮತ್ತು ದೇಶಾದ್ಯಂತದ 10 ಲಕ್ಷ ಪಿಎಂಎವೈ-ಜಿ ಫಲಾನುಭವಿಗಳಿಗೆ ಕಂತುಗಳನ್ನು ಬಿಡುಗಡೆ ಮಾಡಲಿದ್ದಾರೆ. ಬಿಹಾರದಲ್ಲಿ 1 ಲಕ್ಷ ಪಿಎಂಎವೈ-ಜಿ ಮತ್ತು 54,000 ಪಿಎಂಎವೈ-ಯು ಮನೆಗಳ ಗೃಹ ಪ್ರವೇಶವನ್ನು ಗುರುತಿಸುವ ಕೆಲವು ಫಲಾನುಭವಿಗಳಿಗೆ ಅವರು ಕೀಲಿಗಳನ್ನು ಹಸ್ತಾಂತರಿಸಲಿದ್ದಾರೆ.
*****
(Release ID: 2124879)
Read this release in:
Assamese
,
Odia
,
English
,
Urdu
,
Marathi
,
Hindi
,
Bengali
,
Manipuri
,
Punjabi
,
Gujarati
,
Tamil
,
Telugu
,
Malayalam