ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ
azadi ka amrit mahotsav

ಕೇಂದ್ರ ಸಚಿವರಾದ ಶ್ರೀ ನಿತಿನ್ ಗಡ್ಕರಿ ಅವರಿಂದ ಕರ್ನಾಟಕದ 9 ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ

ಪ್ರಕಟಣಾ ದಿನಾಂಕ: 14 JUL 2025 6:04PM by PIB Bengaluru

ಕೇಂದ್ರ ಸಚಿವರಾದ ಶ್ರೀ ನಿತಿನ್ ಗಡ್ಕರಿ ಅವರು ಇಂದು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ₹2,000 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣವಾಗಿರುವ 88 ಕಿಲೋಮೀಟರ್ ವ್ಯಾಪ್ತಿಯ 9 ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪ, ಲೋಕಸಭಾ ಸದಸ್ಯರು, ಶಾಸಕರು ಮತ್ತು ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಉದ್ಘಾಟಿಸಿ, ಶಂಕುಸ್ಥಾಪನೆ ನೆರವೇರಿಸಿದರು.

ನೂತನವಾಗಿ ಉದ್ಘಾಟನೆಗೊಂಡ ಶರಾವತಿ ಸೇತುವೆಯು ಮಲೆನಾಡು ಮತ್ತು ಕರಾವಳಿ ಪ್ರದೇಶಗಳ ನಡುವಿನ ಸಂಪರ್ಕವನ್ನು ಗಮನಾರ್ಹ ರೀತಿಯಲ್ಲಿ ಸುಧಾರಿಸಲಿದೆ. ಇದು ಸಿಗಂದೂರು ಚೌಡೇಶ್ವರಿ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ದಂತಹ ಪ್ರಮುಖ ಯಾತ್ರಾ ಸ್ಥಳಗಳಿಗೆ ಸುಲಭ ಸಂಪರ್ಕವನ್ನು ಒದಗಿಸಲಿದೆ.

NH-367 ರ 47 ಕಿಲೋಮೀಟರ್ ಉದ್ದದ ಬೀದರ್-ಹುಮ್ನಾ ಬಾದ್ ವಿಭಾಗದ ಅಗಲೀಕರಣವು ಕಲಬುರಗಿ ಮತ್ತು ಬೀದರ್ ಜಿಲ್ಲೆಗಳ ನಡುವಿನ ಪ್ರಯಾಣದ ಸಮಯವನ್ನು ಗಣನೀಯವಾಗಿ ಕಡಿಮೆ ಮಾಡಲಿದೆ. NH-75 ರ ಶಿರಾಡಿ ಘಾಟ್ ವಿಸ್ತರಣೆಯಲ್ಲಿ ಕೈಗೊಂಡ ಪುನರ್ ಅಭಿವೃದ್ಧಿ ಕಾರ್ಯಗಳು ಮಳೆಗಾಲದಲ್ಲಿ, ವಿಶೇಷವಾಗಿ ಮಂಗಳೂರು-ಬೆಂಗಳೂರು ಕಾರಿಡಾರ್ ನಲ್ಲಿ ಸುರಕ್ಷಿತ ಮತ್ತು ಅಡೆತಡೆಯಿಲ್ಲದ ಸಂಚಾರಕ್ಕೆ ಸಹಾಯಕವಾಗಲಿದೆ. 

ಶಹಾಬಾದ್ ನಲ್ಲಿ ನಿರ್ಮಾಣ ಮಾಡಿರುವ ರಸ್ತೆ ಮೇಲ್ಸೇತುವೆ (ROB) ಮತ್ತು NH-50 ನಲ್ಲಿ ಕಾಗಿಣಾ ನದಿಗೆ ಅಡ್ಡಲಾಗಿ ನಿರ್ಮಾಣ ಮಾಡಿರುವ ಸೇತುವೆಯು ಕಲಬುರಗಿ ಮತ್ತು ರಾಯಚೂರು ನಡುವೆ ತಡೆರಹಿತ ಸಂಪರ್ಕವನ್ನು ಒದಗಿಸಲಿದೆ. ಜೊತೆಗೆ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ರಸ್ತೆ ಸುರಕ್ಷತೆ ಸುಧಾರಣೆಗಳಿಂದ ಕರ್ನಾಟಕ ಮತ್ತು ಕೇರಳದ ನಡುವೆ ವೇಗವಾದ, ಸುರಕ್ಷಿತ ಮತ್ತು ಹೆಚ್ಚು ಪರಿಣಾಮಕಾರಿ ಪ್ರಯಾಣಕ್ಕೆ ಅನುಕೂಲಕರವಾಗಲಿದ್ದು , ಪ್ರಯಾಣದ ಸಮಯ ಮತ್ತು ಇಂಧನ ಬಳಕೆಯನ್ನು ಕಡಿಮೆ ಮಾಡಲಿದೆ.

 

*****
 


(ಪ್ರಕಟಣೆ ಐ.ಡಿ.: 2144696) ವಿಸಿಟರ್ ಕೌಂಟರ್ : 39
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , हिन्दी , Tamil