ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ
azadi ka amrit mahotsav

ಪಶ್ಚಿಮ ಏಷ್ಯಾದ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಪ್ರಮುಖ ವಲಯಗಳ ಕುರಿತಾದ ಮಾಹಿತಿ


ವದಂತಿಗಳನ್ನು ತಡೆಗಟ್ಟಲು ಪತ್ರಿಕಾಗೋಷ್ಠಿಗಳ ಮೂಲಕ ಸರಿಯಾದ ಮಾಹಿತಿಯನ್ನು ಪ್ರಸಾರ ಮಾಡುವಂತೆ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ

ಡಿ-ಪಿ ಎನ್‌ ಜಿ ಸಂಪರ್ಕಗಳನ್ನು ವೇಗಗೊಳಿಸಲು ಸಿಜಿಡಿ ಘಟಕಗಳಿಗೆ ಸೂಚನೆ; ರಾಷ್ಟ್ರೀಯ ಪಿ ಎನ್‌ ಜಿ ಅಭಿಯಾನ 2.0 ಅನ್ನು 30.06.2026 ರವರೆಗೆ ವಿಸ್ತರಿಸಲಾಗಿದೆ

ಮಾರ್ಚ್ ತಿಂಗಳಿನಲ್ಲಿ 3.1 ಲಕ್ಷಕ್ಕೂ ಹೆಚ್ಚು ಸಂಪರ್ಕಗಳಿಗೆ ಅನಿಲ ಪೂರೈಕೆ; 2.7 ಲಕ್ಷಕ್ಕೂ ಹೆಚ್ಚು ಹೊಸ ಸಂಪರ್ಕಗಳ ಸೇರ್ಪಡೆ ಮತ್ತು ಅನಿಲ ಪೂರೈಕೆ ಪ್ರಕ್ರಿಯೆ ಪ್ರಗತಿಯಲ್ಲಿದೆ

ಮಾರ್ಚ್ 1, 2026 ರಿಂದ ಸರಾಸರಿ ಪ್ರತಿದಿನ 50 ಲಕ್ಷಕ್ಕೂ ಹೆಚ್ಚು ಗೃಹಬಳಕೆಯ ಎಲ್‌ ಪಿ ಜಿ ಸಿಲಿಂಡರ್‌ ಗಳ ವಿತರಣೆ

ಮಾರ್ಚ್ 23 ರಿಂದ ವಲಸೆ ಕಾರ್ಮಿಕರಿಗೆ 3.2 ಲಕ್ಷಕ್ಕೂ ಹೆಚ್ಚು 5 ಕೆಜಿ ಎಫ್‌ ಟಿ ಎಲ್ ಸಿಲಿಂಡರ್‌ ಗಳ ಮಾರಾಟ; ನಿನ್ನೆ ಒಂದೇ ದಿನ 63,000 ಕ್ಕೂ ಹೆಚ್ಚು ಸಿಲಿಂಡರ್‌ ಗಳ ಮಾರಾಟ

ಇದುವರೆಗೆ 959 ಕ್ಕೂ ಹೆಚ್ಚು ಭಾರತೀಯ ನಾವಿಕರ ಸುರಕ್ಷಿತ ಸ್ವದೇಶ ವಾಪಸಾತಿಗೆ ಸೌಲಭ್ಯ; ಕಳೆದ 24 ಗಂಟೆಗಳಲ್ಲಿ 9 ಜನರ ವಾಪಸಾತಿ

ಭಾರತದಾದ್ಯಂತ ಬಂದರು ಕಾರ್ಯಾಚರಣೆಗಳು ಸಹಜ; ಯಾವುದೇ ದಟ್ಟಣೆ ವರದಿಯಾಗಿಲ್ಲ

ಫೆಬ್ರವರಿ 28 ರಿಂದ ಇದುವರೆಗೆ 5.72 ಲಕ್ಷಕ್ಕೂ ಹೆಚ್ಚು ಪ್ರಯಾಣಿಕರು ಭಾರತಕ್ಕೆ ಮರಳಿದ್ದಾರೆ; ಪ್ರಯಾಣ ಸುಗಮಗೊಳಿಸುವ ಪ್ರಯತ್ನಗಳು ಮುಂದುವರಿದಿವೆ

ಪ್ರದೇಶದಾದ್ಯಂತ ಮಿಷನ್‌ ಗಳು ಮತ್ತು ಪೋಸ್ಟ್‌ ಗಳು 24x7 ಸಹಾಯವಾಣಿಗಳೊಂದಿಗೆ ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತಿವೆ

ಪ್ರಕಟಣಾ ದಿನಾಂಕ: 31 MAR 2026 2:55PM by PIB Bengaluru

ಪಶ್ಚಿಮ ಏಷ್ಯಾದಲ್ಲಿನ ಬೆಳವಣಿಗೆಗಳು ಮುಂದುವರಿಯುತ್ತಿರುವಂತೆಯೇ, ಭಾರತ ಸರ್ಕಾರವು ನಿರ್ಣಾಯಕ ವಲಯಗಳಲ್ಲಿ ಸ್ಥಿರತೆಯನ್ನು ಕಾಪಾಡಿಕೊಳ್ಳಲು ಸಕ್ರಿಯ ಸಂಘಟಿತ ಕ್ರಮಗಳನ್ನು ಕೈಗೊಳ್ಳುತ್ತಿದೆ. ತಡೆರಹಿತ ಇಂಧನ ಪೂರೈಕೆಯನ್ನು ಖಚಿತಪಡಿಸಿಕೊಳ್ಳುವುದು, ಕಡಲ ಕಾರ್ಯಾಚರಣೆಗಳನ್ನು ರಕ್ಷಿಸುವುದು ಮತ್ತು ಈ ಪ್ರದೇಶದಲ್ಲಿರುವ ಭಾರತೀಯ ಪ್ರಜೆಗಳಿಗೆ ಅಗತ್ಯ ಬೆಂಬಲವನ್ನು ವಿಸ್ತರಿಸುವತ್ತ ಗಮನ ಕೇಂದ್ರೀಕರಿಸಲಾಗಿದೆ. ಈ ಪ್ರಯತ್ನಗಳ ಪ್ರಸ್ತುತ ಸ್ಥಿತಿಯನ್ನು ಕೆಳಗೆ ವಿವರಿಸಲಾಗಿದೆ.

ಇಂಧನ ಪೂರೈಕೆ ಮತ್ತು ಇಂಧನ ಲಭ್ಯತೆ

ಹಾರ್ಮುಜ್ ಜಲಸಂಧಿಯ ಮುಚ್ಚುವಿಕೆಯ ಹಿನ್ನೆಲೆಯಲ್ಲಿ ದೇಶಾದ್ಯಂತ ಪೆಟ್ರೋಲಿಯಂ ಉತ್ಪನ್ನಗಳು ಮತ್ತು ಎಲ್‌ ಪಿ ಜಿ ಯ ತಡೆರಹಿತ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರಸ್ತುತ ಸ್ಥಿತಿ ಹೀಗಿದೆ:

ಕಚ್ಚಾ ತೈಲ/ಸಂಸ್ಕರಣಾಗಾರಗಳು

  • ಎಲ್ಲಾ ಸಂಸ್ಕರಣಾಗಾರಗಳು ಹೆಚ್ಚಿನ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸುತ್ತಿವೆ, ಸಾಕಷ್ಟು ಕಚ್ಚಾ ತೈಲ ದಾಸ್ತಾನು ಲಭ್ಯವಿದೆ. ದೇಶವು ಪೆಟ್ರೋಲ್ ಮತ್ತು ಡೀಸೆಲ್‌ ನ ಸಾಕಷ್ಟು ಸಂಗ್ರಹವನ್ನೂ ಸಹ ನಿರ್ವಹಿಸುತ್ತಿದೆ.
  • ದೇಶೀಯ ಬಳಕೆಯನ್ನು ಬೆಂಬಲಿಸಲು ಸಂಸ್ಕರಣಾಗಾರಗಳಿಂದ ಗೃಹಬಳಕೆಯ ಎಲ್‌ ಪಿ ಜಿ ಉತ್ಪಾದನೆಯನ್ನು ಹೆಚ್ಚಿಸಲಾಗಿದೆ.

ಚಿಲ್ಲರೆ ಮಾರಾಟ ಮಳಿಗೆಗಳು

  • ದೇಶಾದ್ಯಂತ ಎಲ್ಲಾ ಚಿಲ್ಲರೆ ಮಾರಾಟ ಮಳಿಗೆಗಳು ಸಹಜವಾಗಿ ಕಾರ್ಯನಿರ್ವಹಿಸುತ್ತಿವೆ.
  • ಮಧ್ಯಪ್ರಾಚ್ಯ ಬಿಕ್ಕಟ್ಟು ಕಚ್ಚಾ ತೈಲ ಬೆಲೆಗಳಲ್ಲಿ ಅಸಹಜ ಹೆಚ್ಚಳಕ್ಕೆ ಕಾರಣವಾಗಿದೆ. ಗ್ರಾಹಕರನ್ನು ಈ ಪರಿಣಾಮದಿಂದ ರಕ್ಷಿಸಲು, ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ ಗೆ 10 ರೂಪಾಯಿಗಳಷ್ಟು ಕಡಿತಗೊಳಿಸುವ ಮೂಲಕ ಈ ಹೊರೆಯ ಒಂದು ಭಾಗವನ್ನು ಭರಿಸಲು ಭಾರತ ಸರ್ಕಾರ ನಿರ್ಧರಿಸಿದೆ.
  • ಇದಲ್ಲದೆ, ದೇಶೀಯ ಮಾರುಕಟ್ಟೆಯಲ್ಲಿ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಭಾರತ ಸರ್ಕಾರವು ಡೀಸೆಲ್ ಮೇಲೆ ಲೀಟರ್‌ ಗೆ 21.5 ರೂ. ಮತ್ತು ಏವಿಯೇಷನ್ ಟರ್ಬೈನ್ ಫ್ಯುಯೆಲ್ (ಎಟಿಎಫ್) ಮೇಲೆ ಲೀಟರ್‌‌ ಗೆ 29.5 ರೂ. ರಫ್ತು ಸುಂಕವನ್ನು ವಿಧಿಸಿದೆ.
  • ವದಂತಿಗಳಿಂದಾಗಿ ಕೆಲವು ಪ್ರದೇಶಗಳಲ್ಲಿ 'ಭೀತಿಯ ಖರೀದಿ' ಕಂಡುಬಂದಿದ್ದು, ಇದರ ಪರಿಣಾಮವಾಗಿ ಚಿಲ್ಲರೆ ಮಳಿಗೆಗಳಲ್ಲಿ ಅಸಾಮಾನ್ಯ ಮಾರಾಟ ಮತ್ತು ವಿಪರೀತ ಜನಸಂದಣಿ ಉಂಟಾಗಿದೆ. ಆದಾಗ್ಯೂ, ದೇಶದ ಎಲ್ಲಾ ಪೆಟ್ರೋಲ್ ಬಂಕ್‌ ಗಳಲ್ಲಿ ಸಾಕಷ್ಟು ಪೆಟ್ರೋಲ್ ಮತ್ತು ಡೀಸೆಲ್ ದಾಸ್ತಾನು ಲಭ್ಯವಿದೆ ಎಂದು ತಿಳಿಸಲಾಗಿದೆ.
  • ವದಂತಿಗಳನ್ನು ನಂಬದಂತೆ ಸರ್ಕಾರವು ತನ್ನ ಸಲಹೆಯನ್ನು ಪುನರುಚ್ಚರಿಸಿದೆ. ವದಂತಿಗಳನ್ನು ತಡೆಗಟ್ಟಲು, ಪತ್ರಿಕಾಗೋಷ್ಠಿಗಳ ಮೂಲಕ ಸರಿಯಾದ ಮಾಹಿತಿಯನ್ನು ಪ್ರಸಾರ ಮಾಡುವಂತೆ ರಾಜ್ಯ ಸರ್ಕಾರಗಳನ್ನೂ ವಿನಂತಿಸಲಾಗಿದೆ.

ನೈಸರ್ಗಿಕ ಅನಿಲ

  • ಡಿ-ಪಿ ಎನ್‌ ಜಿ ಮತ್ತು ಸಿ ಎನ್‌ ಜಿ-ಸಾರಿಗೆಯ ಗ್ರಾಹಕರಿಗೆ ಆದ್ಯತೆ ನೀಡಲಾಗಿದ್ದು, ಶೇ. 100 ರಷ್ಟು ಪೂರೈಕೆ ಮಾಡಲಾಗುತ್ತಿದೆ.
  • ಗ್ರಿಡ್‌ ಗೆ ಸಂಪರ್ಕ ಹೊಂದಿರುವ ಕೈಗಾರಿಕಾ ಮತ್ತು ವಾಣಿಜ್ಯ ಗ್ರಾಹಕರಿಗೆ ಅವರ ಸರಾಸರಿ ಬಳಕೆಯ ಶೇ. 80 ರಷ್ಟು ಪೂರೈಕೆ ಮಾಡಲಾಗುತ್ತಿದೆ.
  • ವಾಣಿಜ್ಯ ಎಲ್‌ ಪಿ ಜಿ ಲಭ್ಯತೆಯ ಬಗೆಗಿನ ಕಳವಳಗಳನ್ನು ಪರಿಹರಿಸಲು, ರೆಸ್ಟೋರೆಂಟ್‌ ಗಳು, ಹೋಟೆಲ್‌ ಗಳು ಮತ್ತು ಕ್ಯಾಂಟೀನ್‌ ಗಳಂತಹ ವಾಣಿಜ್ಯ ಸಂಸ್ಥೆಗಳಿಗೆ ತಮ್ಮ ಎಲ್ಲಾ ಭೌಗೋಳಿಕ ಪ್ರದೇಶಗಳಲ್ಲಿ ಪಿ ಎನ್‌ ಜಿ ಸಂಪರ್ಕಗಳಿಗೆ ಆದ್ಯತೆ ನೀಡುವಂತೆ ನಗರ ಅನಿಲ ವಿತರಣಾ (ಸಿಜಿಡಿ) ಘಟಕಗಳಿಗೆ ಭಾರತ ಸರ್ಕಾರವು ಸಲಹೆ ನೀಡಿದೆ.
  • ಕಾರ್ಯನಿರ್ವಹಿಸುತ್ತಿರುವ ಯೂರಿಯಾ ಸ್ಥಾವರಗಳಿಗೆ ಪೂರೈಕೆಯು ಈಗ ಕಳೆದ 6 ತಿಂಗಳ ಸರಾಸರಿ ಬಳಕೆಯ ಸುಮಾರು ಶೇ. 70-75 ರಷ್ಟು ಸ್ಥಿರವಾಗಿದೆ. ಪೂರೈಕೆ ಮತ್ತು ಪೈಪ್‌ಲೈನ್ ಹೈಡ್ರಾಲಿಕ್ಸ್ ನಿರ್ವಹಿಸಲು ಹೆಚ್ಚುವರಿ ಎಲ್ ಎನ್‌ ಜಿ ಕಾರ್ಗೋಗಳು ಮತ್ತು ಮರು-ಅನಿಲೀಕೃತ ಎಲ್ ಎನ್‌ ಜಿ ಅನ್ನು ಸಹ ಪಡೆಯಲಾಗುತ್ತಿದೆ.
  • ಎಲ್ಲಾ ಕೈಗಾರಿಕಾ ಗ್ರಾಹಕರು ಮತ್ತು ರಸಗೊಬ್ಬರ ಘಟಕಗಳು ತಮ್ಮ ಹೆಚ್ಚುವರಿ ಅಗತ್ಯವನ್ನು ಸ್ಪಾಟ್ ಆಧಾರದ ಮೇಲೆ ಒದಗಿಸುವಂತೆ ಸೂಚಿಸಲಾಗಿದೆ, ಇದರಿಂದ ಅನಿಲ ಮಾರುಕಟ್ಟೆ ಕಂಪನಿಗಳು ಅದನ್ನು ವ್ಯವಸ್ಥೆ ಮಾಡಬಹುದು.
  • ಐಜಿಎಲ್‌, ಎಂಜಿಎಲ್‌, ಗೇಲ್‌ ಗ್ಯಾಸ್‌ ಮತ್ತು ಬಿಪಿಸಿಎಲ್‌ ನಂತಹ ಸಿಜಿಡಿ ಕಂಪನಿಗಳು ಗೃಹಬಳಕೆಯ ಮತ್ತು ವಾಣಿಜ್ಯ ಪಿ ಎನ್‌ ಜಿ ಸಂಪರ್ಕಗಳನ್ನು ಪಡೆಯಲು ಪ್ರೋತ್ಸಾಹಕಗಳನ್ನು ನೀಡಿವೆ.
  • ಸಿಜಿಡಿ ಜಾಲದ ವಿಸ್ತರಣೆಗೆ ಅಗತ್ಯವಿರುವ ಅರ್ಜಿಗಳ ಅನುಮೋದನೆಯನ್ನು ತ್ವರಿತಗೊಳಿಸುವಂತೆ ಭಾರತ ಸರ್ಕಾರವು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳು ಮತ್ತು ಕೇಂದ್ರ ಸಚಿವಾಲಯಗಳನ್ನು ಕೋರಿದೆ.
  • ದಿನಾಂಕ 18.03.2026 ರ ಪತ್ರದ ಮೂಲಕ ಭಾರತ ಸರ್ಕಾರವು ಎಲ್ಲಾ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ ಹೆಚ್ಚುವರಿ ಶೇ. 10 ರಷ್ಟು ವಾಣಿಜ್ಯ ಎಲ್‌ ಪಿ ಜಿ ಹಂಚಿಕೆಯನ್ನು ನೀಡಲು ಮುಂದಾಗಿದೆ, ಆದರೆ ಅವರು ಎಲ್‌ ಪಿ ಜಿಯಿಂದ ಪಿ ಎನ್‌ ಜಿ ಗೆ ದೀರ್ಘಕಾಲೀನ ಪರಿವರ್ತನೆಗೆ ಸಹಾಯ ಮಾಡಬೇಕಾಗುತ್ತದೆ. ತರುವಾಯ, ಸಿಜಿಡಿ ಜಾಲವನ್ನು ಉತ್ತೇಜಿಸಲು ಸುಧಾರಣಾ ಕ್ರಮಗಳನ್ನು ಕೈಗೊಂಡಿರುವ ಹಲವಾರು ರಾಜ್ಯಗಳಿಂದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು (MoPNG) ಅರ್ಜಿಗಳನ್ನು ಸ್ವೀಕರಿಸಿದೆ. ಅದರಂತೆ ಕೆಲವು ರಾಜ್ಯಗಳಿಗೆ ಹೆಚ್ಚುವರಿ ಹಂಚಿಕೆಯನ್ನು ಶಿಫಾರಸು ಮಾಡಲಾಗಿದೆ.
  • ಪಿ ಎನ್‌ ಜಿ ಪೈಪ್‌ಲೈನ್ ಮೂಲಸೌಕರ್ಯವು ಹತ್ತಿರದಲ್ಲಿ ಲಭ್ಯವಿರುವ ಕಡೆಗಳಲ್ಲಿ, ವಸತಿ ಶಾಲೆಗಳು ಮತ್ತು ಕಾಲೇಜುಗಳು, ಹಾಸ್ಟೆಲ್‌ ಗಳು, ಸಮುದಾಯ ಅಡುಗೆಮನೆಗಳು, ಅಂಗನವಾಡಿ ಅಡುಗೆಮನೆಗಳು ಇತ್ಯಾದಿಗಳನ್ನು 5 ದಿನಗಳ ಒಳಗೆ ಪಿ ಎನ್‌ ಜಿ ಮೂಲಕ ಸಂಪರ್ಕಿಸಲು ಎಲ್ಲಾ ಪ್ರಯತ್ನಗಳನ್ನು ಮಾಡುವಂತೆ ಪಿ ಎನ್‌ ಜಿ ಆರ್‌ ಬಿ 23.03.2026 ರ ತನ್ನ ಆದೇಶದಲ್ಲಿ ಎಲ್ಲಾ ಸಿಜಿಡಿ ಘಟಕಗಳಿಗೆ ನಿರ್ದೇಶಿಸಿದೆ.
  • ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು 24.03.2026 ರ ಪತ್ರದ ಮೂಲಕ "ಸಿಜಿಡಿ ಮೂಲಸೌಕರ್ಯಕ್ಕಾಗಿ ತ್ವರಿತ ಅನುಮೋದನೆ ಚೌಕಟ್ಟು" ಅನ್ನು 3 ತಿಂಗಳ ಅವಧಿಗೆ ವಿಶೇಷ ಕ್ರಮವಾಗಿ ಅಳವಡಿಸಿಕೊಂಡಿರುವುದಾಗಿ ತಿಳಿಸಿದೆ, ಇದರಲ್ಲಿ ಸಿಜಿಡಿ ಮೂಲಸೌಕರ್ಯಕ್ಕೆ ಸಂಬಂಧಿಸಿದ ಅರ್ಜಿಗಳನ್ನು ಆದ್ಯತೆಯ ಮೇಲೆ ಪ್ರಕ್ರಿಯೆಗೊಳಿಸಲಾಗುತ್ತದೆ.
  • ಭಾರತ ಸರ್ಕಾರವು 24.03.2026 ರ ಗೆಜೆಟ್ ಮೂಲಕ ಅಗತ್ಯ ವಸ್ತುಗಳ ಕಾಯ್ದೆ, 1955 ರ ಅಡಿಯಲ್ಲಿ "ನೈಸರ್ಗಿಕ ಅನಿಲ ಮತ್ತು ಪೆಟ್ರೋಲಿಯಂ ಉತ್ಪನ್ನಗಳ ವಿತರಣೆ (ಪೈಪ್‌ಲೈನ್‌ ಹಾಕುವುದು, ನಿರ್ಮಾಣ, ಕಾರ್ಯಾಚರಣೆ ಮತ್ತು ವಿಸ್ತರಣೆ ಮತ್ತು ಇತರ ಸೌಲಭ್ಯಗಳ ಮೂಲಕ) ಆದೇಶ, 2026" ಅನ್ನು ಅಧಿಸೂಚಿಸಿದೆ. ಈ ಆದೇಶವು ದೇಶಾದ್ಯಂತ ಪೈಪ್‌ಲೈನ್‌ ಗಳನ್ನು ಹಾಕಲು ಮತ್ತು ವಿಸ್ತರಿಸಲು ಸುಗಮ ಮತ್ತು ಸಮಯಬದ್ಧ ಚೌಕಟ್ಟನ್ನು ಒದಗಿಸುತ್ತದೆ, ಅನುಮೋದನೆಗಳಲ್ಲಿನ ವಿಳಂಬ ಮತ್ತು ಭೂಮಿಯ ಲಭ್ಯತೆಯ ಸಮಸ್ಯೆಗಳನ್ನು ಪರಿಹರಿಸುತ್ತದೆ ಮತ್ತು ವಸತಿ ಪ್ರದೇಶಗಳು ಸೇರಿದಂತೆ ನೈಸರ್ಗಿಕ ಅನಿಲ ಮೂಲಸೌಕರ್ಯದ ವೇಗದ ಅಭಿವೃದ್ಧಿಗೆ ಅನುವು ಮಾಡಿಕೊಡುತ್ತದೆ. ಇದು ಪಿ ಎನ್‌ ಜಿ ಜಾಲದ ಬೆಳವಣಿಗೆಯನ್ನು ವೇಗಗೊಳಿಸಲು, ಕೊನೆಯ ಮೈಲಿ ಸಂಪರ್ಕವನ್ನು ಹೆಚ್ಚಿಸಲು ಮತ್ತು ಸ್ವಚ್ಛ ಇಂಧನಗಳತ್ತ ಪರಿವರ್ತನೆಯನ್ನು ಬೆಂಬಲಿಸಲು ನಿರೀಕ್ಷಿಸಲಾಗಿದೆ, ಆ ಮೂಲಕ ಇಂಧನ ಭದ್ರತೆಯನ್ನು ಬಲಪಡಿಸುತ್ತದೆ ಮತ್ತು ಭಾರತದ ಅನಿಲ ಆಧಾರಿತ ಆರ್ಥಿಕತೆಯನ್ನು ಮುನ್ನಡೆಸುತ್ತದೆ.
  • ರಕ್ಷಣಾ ಸಚಿವಾಲಯವು 27.03.2026 ರ ಪತ್ರದ ಮೂಲಕ ಜೂನ್ 30, 2026 ರವರೆಗೆ ಜಾರಿಯಲ್ಲಿರುವಂತೆ ಅಲ್ಪಾವಧಿಯ ನೀತಿ ಮಾರ್ಪಾಡನ್ನು ಹೊರಡಿಸಿದ್ದು, ರಕ್ಷಣಾ ವಿಭಾಗದ ಎಲ್ಲಾ ವಸತಿ ಪ್ರದೇಶಗಳಲ್ಲಿ/ಯೂನಿಟ್ ಲೈನ್‌ ಗಳಲ್ಲಿ ಪಿ ಎನ್‌ ಜಿ ಮೂಲಸೌಕರ್ಯ ಸ್ಥಾಪನೆಯನ್ನು ತ್ವರಿತಗೊಳಿಸಿದೆ.
  • ಪಿ ಎನ್‌ ಜಿ ಆರ್‌ ಬಿ ಅಧ್ಯಕ್ಷರು 30.03.2026 ರಂದು ವೀಡಿಯೊ ಕಾನ್ಫರೆನ್ಸ್ ನಡೆಸಿ, ಡಿ-ಪಿ ಎನ್‌ ಜಿ ಸಂಪರ್ಕಗಳನ್ನು ತ್ವರಿತಗೊಳಿಸಲು ಸಿಜಿಡಿ ಘಟಕಗಳಿಗೆ ನಿರ್ದೇಶನ ನೀಡಿದರು. ಅಲ್ಲದೆ, ಪಿ ಎನ್‌ ಜಿ ವಿಸ್ತರಣೆಯಲ್ಲಿನ ವೇಗವನ್ನು ಉಳಿಸಿಕೊಳ್ಳಲು ರಾಷ್ಟ್ರೀಯ ಪಿ ಎನ್‌ ಜಿ ಅಭಿಯಾನ 2.0 (01.01.2026-31.03.2026) ಅನ್ನು ಈಗ 30.06.2026 ರವರೆಗೆ ವಿಸ್ತರಿಸಲಾಗಿದೆ.
  • ಮಾರ್ಚ್ ತಿಂಗಳಿನಲ್ಲಿ, ಗೃಹಬಳಕೆ, ವಾಣಿಜ್ಯ, ಹಾಸ್ಟೆಲ್, ಮೆಸ್, ಕ್ಯಾಂಟೀನ್ ಇತ್ಯಾದಿಗಳನ್ನು ಒಳಗೊಂಡಂತೆ 3.1 ಲಕ್ಷಕ್ಕೂ ಹೆಚ್ಚು ಸಂಪರ್ಕಗಳಿಗೆ ಅನಿಲ ಪೂರೈಕೆ ಮಾಡಲಾಗಿದೆ. ಇದರ ಜೊತೆಗೆ, 2.7 ಲಕ್ಷಕ್ಕೂ ಹೆಚ್ಚು ಹೊಸ ಸಂಪರ್ಕಗಳನ್ನು ನೀಡಲಾಗಿದ್ದು, ಅವುಗಳಿಗೆ ಅನಿಲ ಪೂರೈಸುವ ಪ್ರಕ್ರಿಯೆ ನಡೆಯುತ್ತಿದೆ.

ಎಲ್‌ ಪಿ ಜಿ

  • ಪ್ರಸ್ತುತ ಭೌಗೋಳಿಕ ರಾಜಕೀಯ ಪರಿಸ್ಥಿತಿಯಿಂದಾಗಿ ಎಲ್‌ ಪಿ ಜಿ ಪೂರೈಕೆಯ ಮೇಲೆ ಪರಿಣಾಮ ಬೀರಿದೆ.

ಗೃಹಬಳಕೆಯ ಎಲ್‌ ಪಿ ಜಿ ಪೂರೈಕೆ:

  • ಎಲ್‌ ಪಿ ಜಿ ವಿತರಕರಲ್ಲಿ ಯಾವುದೇ ದಾಸ್ತಾನು ಕೊರತೆ ವರದಿಯಾಗಿಲ್ಲ.
  • ನಿನ್ನೆ ಉದ್ಯಮದಾದ್ಯಂತ ಆನ್‌ಲೈನ್ ಎಲ್‌ ಪಿ ಜಿ ಸಿಲಿಂಡರ್ ಬುಕ್ಕಿಂಗ್‌ ಗಳು ಶೇಕಡಾ 92 ಕ್ಕೆ ಏರಿದೆ.
  • ವಿತರಕರ ಮಟ್ಟದಲ್ಲಿ ಅಕ್ರಮ ವರ್ಗಾವಣೆಯನ್ನು ತಡೆಗಟ್ಟಲು, ಡೆಲಿವರಿ ಅಥೆಂಟಿಕೇಶನ್ ಕೋಡ್ (ಡಿಎಸಿ) ಆಧಾರಿತ ವಿತರಣೆಗಳನ್ನು ಫೆಬ್ರವರಿ 2026 ರಲ್ಲಿದ್ದ ಶೇಕಡಾ 53 ರಿಂದ ನಿನ್ನೆ ಶೇಕಡಾ 83 ಕ್ಕೆ ಹೆಚ್ಚಿಸಲಾಗಿದೆ.
  • ಮಾರ್ಚ್ 1, 2026 ರಿಂದ, ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳು ಪ್ರತಿದಿನ ಸರಾಸರಿ 50 ಲಕ್ಷಕ್ಕೂ ಹೆಚ್ಚು ಗೃಹಬಳಕೆಯ ಎಲ್‌ ಪಿ ಜಿ ಸಿಲಿಂಡರ್‌ ಗಳನ್ನು ವಿತರಿಸಿವೆ.

ವಾಣಿಜ್ಯ ಎಲ್‌ ಪಿ ಜಿ ಪೂರೈಕೆ:

  • ಸರ್ಕಾರವು ಈಗಾಗಲೇ ಗ್ರಾಹಕರಿಗೆ ಭಾಗಶಃ ವಾಣಿಜ್ಯ ಎಲ್‌ ಪಿ ಜಿ ಪೂರೈಕೆಯನ್ನು (ಶೇ. 20) ಮರುಸ್ಥಾಪಿಸಿದೆ. ಇದಲ್ಲದೆ, ಪಿ ಎನ್‌ ಜಿ ವಿಸ್ತರಣೆಗಾಗಿ ಸುಲಭ ವ್ಯಾಪಾರ ಸುಧಾರಣೆಗಳ ಆಧಾರದ ಮೇಲೆ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ ಹೆಚ್ಚುವರಿ ಶೇ. 10 ರಷ್ಟು ವಾಣಿಜ್ಯ ಎಲ್‌ ಪಿ ಜಿಯನ್ನು ಹಂಚಿಕೆ ಮಾಡಲು ಭಾರತ ಸರ್ಕಾರವು 18.03.2026 ರ ಪತ್ರದಲ್ಲಿ ಪ್ರಸ್ತಾಪಿಸಿತ್ತು.
  • ಭಾರತ ಸರ್ಕಾರವು 21.03.2026 ರ ಪತ್ರದ ಮೂಲಕ ರಾಜ್ಯಗಳಿಗೆ ಇನ್ನೂ ಶೇ. 20 ರಷ್ಟು ವಾಣಿಜ್ಯ ಎಲ್‌ ಪಿ ಜಿ ಹಂಚಿಕೆಯನ್ನು ಅನುಮತಿಸಿದೆ, ಇದು ಒಟ್ಟು ಹಂಚಿಕೆಯನ್ನು ಶೇ. 50 ಕ್ಕೆ (ಸುಧಾರಣೆಗಳ ಆಧಾರದ ಮೇಲೆ ನೀಡಲಾದ ಶೇ. 10 ಸೇರಿ) ಕೊಂಡೊಯ್ಯುತ್ತದೆ. ಈ ಹೆಚ್ಚುವರಿ ಶೇ. 20 ಹಂಚಿಕೆಯನ್ನು ಆದ್ಯತೆಯ ಮೇರೆಗೆ ರೆಸ್ಟೋರೆಂಟ್‌ ಗಳು, ಧಾಬಾಗಳು, ಹೋಟೆಲ್‌ ಗಳು, ಕೈಗಾರಿಕಾ ಕ್ಯಾಂಟೀನ್‌ ಗಳು, ಆಹಾರ ಸಂಸ್ಕರಣೆ/ಡೈರಿ, ರಾಜ್ಯ ಸರ್ಕಾರ ಅಥವಾ ಸ್ಥಳೀಯ ಸಂಸ್ಥೆಗಳು ನಡೆಸುವ ಸಬ್ಸಿಡಿ ದರದ ಕ್ಯಾಂಟೀನ್‌ ಗಳು, ಸಮುದಾಯ ಅಡುಗೆಮನೆಗಳು ಮತ್ತು ವಲಸೆ ಕಾರ್ಮಿಕರಿಗಾಗಿ 5 ಕೆಜಿ ಎಫ್‌ಟಿಎಲ್ ಸಿಲಿಂಡರ್‌ ಗಳಿಗೆ ನೀಡಲಾಗುವುದು.
  • ಭಾರತ ಸರ್ಕಾರವು 27.03.2026 ರ ಪತ್ರದ ಮೂಲಕ ವಾಣಿಜ್ಯ ಎಲ್‌ ಪಿ ಜಿ ಗೆ ಹೆಚ್ಚುವರಿ ಶೇ. 20 ರಷ್ಟು ಹಂಚಿಕೆ ಮಾಡಲು ನಿರ್ಧರಿಸಿದೆ (ಇದು ಒಟ್ಟು ವಾಣಿಜ್ಯ ಹಂಚಿಕೆಯನ್ನು ಬಿಕ್ಕಟ್ಟಿನ ಪೂರ್ವದ ಮಟ್ಟದ ಶೇ. 70 ಕ್ಕೆ ತರುತ್ತದೆ). ಈ ಹೆಚ್ಚುವರಿ ಶೇ. 20 ಹಂಚಿಕೆಯನ್ನು ಉಕ್ಕು, ಆಟೋಮೊಬೈಲ್, ಜವಳಿ, ಡೈ, ರಾಸಾಯನಿಕಗಳು ಮತ್ತು ಪ್ಲಾಸ್ಟಿಕ್ ಕೈಗಾರಿಕೆಗಳಿಗೆ ನೀಡಲಾಗುವುದು. ಇದರಲ್ಲಿ, ಸಂಸ್ಕರಣಾ ಕೈಗಾರಿಕೆಗಳಿಗೆ ಅಥವಾ ನೈಸರ್ಗಿಕ ಅನಿಲದಿಂದ ಬದಲಾಯಿಸಲು ಸಾಧ್ಯವಾಗದ ವಿಶೇಷ ತಾಪನ ಉದ್ದೇಶಗಳಿಗಾಗಿ ಎಲ್‌ ಪಿ ಜಿ ಅಗತ್ಯವಿರುವ ಕೈಗಾರಿಕೆಗಳಿಗೆ ಆದ್ಯತೆ ನೀಡಲಾಗುವುದು.
  • ಮಾರ್ಚ್ 23, 2026 ರಿಂದ ದೇಶಾದ್ಯಂತ ವಲಸೆ ಕಾರ್ಮಿಕರಿಗೆ 3.2 ಲಕ್ಷಕ್ಕೂ ಹೆಚ್ಚು 5 ಕೆಜಿ ಎಫ್‌ ಟಿ ಎಲ್ ಸಿಲಿಂಡರ್‌ ಗಳನ್ನು ಮಾರಾಟ ಮಾಡಲಾಗಿದೆ.
  • ನಿನ್ನೆ ಒಂದೇ ದಿನ ವಲಸೆ ಕಾರ್ಮಿಕರಿಗೆ 63,000 ಕ್ಕೂ ಹೆಚ್ಚು 5 ಕೆಜಿ ಎಫ್‌ ಟಿ ಎಲ್ ಸಿಲಿಂಡರ್‌ ಗಳನ್ನು ಮಾರಾಟ ಮಾಡಲಾಗಿದೆ.
  • ಹೆಚ್ಚಿನ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳು ಭಾರತ ಸರ್ಕಾರದ ಮಾರ್ಗಸೂಚಿಗಳಿಗೆ ಅನುಗುಣವಾಗಿ ಗೃಹಬಳಕೆಯಲ್ಲದ ಎಲ್‌ ಪಿ ಜಿ ಯನ್ನು ಹಂಚಿಕೆ ಮಾಡಲು ಆದೇಶಗಳನ್ನು ಹೊರಡಿಸಿವೆ. ಮಾರ್ಚ್ 14, 2026 ರಿಂದ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಲ್ಲಿನ ವಾಣಿಜ್ಯ ಘಟಕಗಳಿಂದ ಒಟ್ಟು 47,928 ಮೆಟ್ರಿಕ್ ಟನ್ ಎಲ್‌ ಪಿ ಜಿ ಯನ್ನು ಪಡೆದುಕೊಳ್ಳಲಾಗಿದೆ.

ಸೀಮೆಎಣ್ಣೆ

  • ಎಲ್ಲಾ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ ನಿಯಮಿತ ಹಂಚಿಕೆಯ ಹೊರತಾಗಿ 48,000 ಕೆಎಲ್ ಸೀಮೆಎಣ್ಣೆಯ ಹೆಚ್ಚುವರಿ ಹಂಚಿಕೆಯನ್ನು ಮಾಡಲಾಗಿದೆ.
  • ಭಾರತ ಸರ್ಕಾರವು 29.03.2026 ರ ಗೆಜೆಟ್ ಅಧಿಸೂಚನೆಯ ಮೂಲಕ 'ಸೀಮೆಎಣ್ಣೆ ಮುಕ್ತ' ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಲ್ಲಿ ಅಡುಗೆ ಮತ್ತು ಬೆಳಕಿನ ಉದ್ದೇಶಕ್ಕಾಗಿ ಮಾತ್ರ ಪಿಡಿಎಸ್ ಸೀಮೆಎಣ್ಣೆಯನ್ನು ವಿತರಿಸಲು ಅನುಕೂಲ ಮಾಡಿಕೊಟ್ಟಿದೆ:
    • ಪ್ರತಿ ಜಿಲ್ಲೆಗೆ ಗರಿಷ್ಠ ಎರಡು ಪಿ ಎಸ್‌ ಯು ಒಎಂಸಿ ಸೇವಾ ಕೇಂದ್ರಗಳಿಗೆ (ಆದ್ಯತೆಯ ಮೇರೆಗೆ ಕಂಪನಿ ಮಾಲೀಕತ್ವದ ಕಂಪನಿ ಚಾಲಿತ 5,000 ಲೀಟರ್‌ಗಳವರೆಗೆ ಪಿಡಿಎಸ್ ಸೀಮೆಎಣ್ಣೆಯನ್ನು ಸಂಗ್ರಹಿಸಲು ಅನುಮತಿ ನೀಡಲಾಗಿದೆ.
    • ಈ ಪಿ ಎಸ್‌ ಯು ಒಎಂಸಿ ಸೇವಾ ಕೇಂದ್ರಗಳನ್ನು ಪ್ರತಿ ಜಿಲ್ಲೆಯಲ್ಲಿ ಆಯಾ ರಾಜ್ಯ ಸರ್ಕಾರ ಅಥವಾ ಕೇಂದ್ರಾಡಳಿತ ಪ್ರದೇಶದ ಆಡಳಿತವು ಗೊತ್ತುಪಡಿಸುತ್ತದೆ.
  • 17 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳು ಸೀಮೆಎಣ್ಣೆ ಹಂಚಿಕೆ ಆದೇಶಗಳನ್ನು ಹೊರಡಿಸಿವೆ. ಇದಲ್ಲದೆ, ಹಿಮಾಚಲ ಪ್ರದೇಶ ಮತ್ತು ಲಡಾಖ್ ತಮ್ಮಲ್ಲಿ ಸೀಮೆಎಣ್ಣೆಯ ಅಗತ್ಯವಿಲ್ಲ ಎಂದು ತಿಳಿಸಿವೆ.

ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ಪಾತ್ರ

  • ಅಗತ್ಯ ವಸ್ತುಗಳ ಕಾಯ್ದೆ, 1955 ಮತ್ತು ಎಲ್‌ ಪಿ ಜಿ ನಿಯಂತ್ರಣ ಆದೇಶ, 2000 ಇದರ ಅಡಿಯಲ್ಲಿ, ಯಾವುದೇ ಅಕ್ರಮ ಸಂಗ್ರಹಣೆ ಮತ್ತು ಕಾಳಸಂತೆ ಚಟುವಟಿಕೆಗಳ ವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರಗಳಿಗೆ ಅಧಿಕಾರವಿದೆ. ಪೆಟ್ರೋಲ್, ಡೀಸೆಲ್ ಮತ್ತು ಎಲ್‌ ಪಿ ಜಿ ಸೇರಿದಂತೆ ಅಗತ್ಯ ವಸ್ತುಗಳ ಪೂರೈಕೆ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುವಲ್ಲಿ ಮತ್ತು ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರಗಳು/ಕೇಂದ್ರಾಡಳಿತ ಪ್ರದೇಶಗಳು ಪ್ರಾಥಮಿಕ ಪಾತ್ರವನ್ನು ವಹಿಸಬೇಕಾಗುತ್ತದೆ. ಭಾರತ ಸರ್ಕಾರವು ಅನೇಕ ಪತ್ರಗಳು ಮತ್ತು ವೀಡಿಯೊ ಕಾನ್ಫರೆನ್ಸ್‌ ಗಳ ಮೂಲಕ ಎಲ್ಲಾ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ ಇದನ್ನು ಪುನರುಚ್ಚರಿಸಿದೆ.
  • ಎಲ್ಲಾ ಮುಖ್ಯ ಕಾರ್ಯದರ್ಶಿಗಳು, ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು/ಪ್ರಧಾನ ಕಾರ್ಯದರ್ಶಿಗಳು/ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಕಾರ್ಯದರ್ಶಿಗಳಿಗೆ ಈ ಕೆಳಗಿನಂತೆ ವಿನಂತಿಸಲಾಗಿದೆ –
    • ರಾಜ್ಯ/ಜಿಲ್ಲಾ ಮಟ್ಟದಲ್ಲಿ ಪ್ರತಿದಿನ ಪತ್ರಿಕಾಗೋಷ್ಠಿಗಳನ್ನು ನಡೆಸಲು ಸಾಂಸ್ಥಿಕ ವ್ಯವಸ್ಥೆ ಮಾಡುವುದು ಮತ್ತು ನಿಯಮಿತ ಸಾರ್ವಜನಿಕ ಸಲಹೆಗಳನ್ನು ನೀಡುವುದು.
    • ಸಮರ್ಪಿತ ನಿಯಂತ್ರಣ ಕೊಠಡಿಗಳು/ಸಹಾಯವಾಣಿಗಳನ್ನು ಸ್ಥಾಪಿಸುವುದು.
    • ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ/ತಪ್ಪು ಮಾಹಿತಿಯನ್ನು ಸಕ್ರಿಯವಾಗಿ ಮೇಲ್ವಿಚಾರಣೆ ಮಾಡುವುದು ಮತ್ತು ಅದನ್ನು ಎದುರಿಸುವುದು.
    • ಜಿಲ್ಲಾಡಳಿತದಿಂದ ದೈನಂದಿನ ಜಾರಿ ಕಾರ್ಯಾಚರಣೆಗಳನ್ನು ತೀವ್ರಗೊಳಿಸುವುದು ಮತ್ತು ಒಎಂಸಿಗಳ ಸಮನ್ವಯದೊಂದಿಗೆ ದಾಳಿ ಮತ್ತು ತಪಾಸಣೆಗಳನ್ನು ಮುಂದುವರಿಸುವುದು.
    • ತಮ್ಮ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಲ್ಲಿ ವಾಣಿಜ್ಯ ಎಲ್‌ ಪಿ ಜಿ ಹಂಚಿಕೆ ಆದೇಶಗಳನ್ನು ಹೊರಡಿಸುವುದು.
    • ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ ಹಂಚಿಕೆಯಾದ ಹೆಚ್ಚುವರಿ ಸೀಮೆಎಣ್ಣೆಗಾಗಿ ಹಂಚಿಕೆ ಆದೇಶಗಳನ್ನು ಹೊರಡಿಸುವುದು.
    • RoW/RoU ಅನುಮತಿಗಳು, 24x7 ಕೆಲಸದ ಅನುಮತಿಗಳು ಇತ್ಯಾದಿಗಳನ್ನು ತ್ವರಿತಗೊಳಿಸುವ ಮೂಲಕ ಸಿಜಿಡಿ ವಿಸ್ತರಣೆಯನ್ನು ವೇಗಗೊಳಿಸುವುದು.
    • ಪಿ ಎನ್‌ ಜಿ ಅಳವಡಿಕೆ ಮತ್ತು ಪರ್ಯಾಯ ಇಂಧನಗಳನ್ನು ಉತ್ತೇಜಿಸುವುದು.
    • ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದೊಂದಿಗೆ (MoPNG) ಸಮನ್ವಯಕ್ಕಾಗಿ ಹಿರಿಯ ನೋಡಲ್ ಅಧಿಕಾರಿಗಳನ್ನು ನೇಮಿಸುವುದು.
  • ಸರಿಯಾದ ಮಾಹಿತಿಯನ್ನು ಪ್ರಸಾರ ಮಾಡಲು ಮತ್ತು ವದಂತಿಗಳನ್ನು ತೊಡೆದುಹಾಕಲು ಪ್ರತಿದಿನ ಪತ್ರಿಕಾಗೋಷ್ಠಿಗಳನ್ನು ನಡೆಸಲು ಮತ್ತು ಸಾಮಾಜಿಕ ಮಾಧ್ಯಮ/ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ಸಕ್ರಿಯ ಮಾಹಿತಿಗಳನ್ನು ನೀಡುವಂತೆ ಭಾರತ ಸರ್ಕಾರವು 27.03.2026 ರ ಪತ್ರದ ಮೂಲಕ ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಮತ್ತೆ ವಿನಂತಿಸಿದೆ.
  • ಪ್ರಸ್ತುತ, ಆಂಧ್ರಪ್ರದೇಶ, ಬಿಹಾರ, ಗುಜರಾತ್, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಮಧ್ಯಪ್ರದೇಶ, ಮಹಾರಾಷ್ಟ್ರ, ಮೇಘಾಲಯ, ನಾಗಾಲ್ಯಾಂಡ್, ಒಡಿಶಾ, ರಾಜಸ್ಥಾನ, ತೆಲಂಗಾಣ, ಉತ್ತರ ಪ್ರದೇಶ, ಉತ್ತರಾಖಂಡ, ತಮಿಳುನಾಡು ಮತ್ತು ಅರುಣಾಚಲ ಪ್ರದೇಶ ಸೇರಿದಂತೆ 16 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳು ಪತ್ರಿಕಾಗೋಷ್ಠಿಗಳನ್ನು ನಡೆಸುತ್ತಿವೆ.

ಜಾರಿ ಕ್ರಮಗಳು:

  • ಎಲ್‌ ಪಿ ಜಿ ಅಕ್ರಮ ಸಂಗ್ರಹಣೆ ಮತ್ತು ಕಾಳಸಂತೆಯನ್ನು ತಡೆಯಲು ಅನೇಕ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಲ್ಲಿ ದಾಳಿಗಳು ಮುಂದುವರಿದಿವೆ. 3,000 ಕ್ಕೂ ಹೆಚ್ಚು ದಾಳಿಗಳನ್ನು ನಡೆಸಲಾಗಿದ್ದು, ನಿನ್ನೆ ಒಂದೇ ದಿನ 500 ಕ್ಕೂ ಹೆಚ್ಚು ಸಿಲಿಂಡರ್‌ ಗಳನ್ನು ವಶಪಡಿಸಿಕೊಳ್ಳಲಾಗಿದೆ.
  • ಸುಗಮ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಯಾವುದೇ ಸಂಗ್ರಹಣೆ/ಕಾಳಸಂತೆ ಪ್ರಕರಣಗಳನ್ನು ಪರೀಕ್ಷಿಸಲು ಪಿ ಎಸ್‌ ಯು ಒಎಂಸಿ ಅಧಿಕಾರಿಗಳು ನಿನ್ನೆ ದೇಶಾದ್ಯಂತ 1,200 ಕ್ಕೂ ಹೆಚ್ಚು ಚಿಲ್ಲರೆ ಮಳಿಗೆಗಳು ಮತ್ತು ಎಲ್‌ ಪಿ ಜಿ ವಿತರಣಾ ಕೇಂದ್ರಗಳಲ್ಲಿ ಅನಿರೀಕ್ಷಿತ ತಪಾಸಣೆಗಳನ್ನು ನಡೆಸಿದ್ದಾರೆ.
  • ಪಿ ಎಸ್‌ ಯು ಒಎಂಸಿಗಳು ಇದುವರೆಗೆ ಎಲ್‌ ಪಿ ಜಿ ವಿತರಕರಿಗೆ 540 ಕ್ಕೂ ಹೆಚ್ಚು ಶೋಕಾಸ್ ನೋಟಿಸ್‌ ಗಳನ್ನು ನೀಡಿವೆ.

ಇತರ ಸರ್ಕಾರಿ ಕ್ರಮಗಳು:

  • ಯುದ್ಧದ ಪರಿಸ್ಥಿತಿಯ ಹೊರತಾಗಿಯೂ, ಸರ್ಕಾರವು ಆಸ್ಪತ್ರೆಗಳು ಮತ್ತು ಶಿಕ್ಷಣ ಸಂಸ್ಥೆಗಳಿಗೆ ಹೆಚ್ಚಿನ ಆದ್ಯತೆಯೊಂದಿಗೆ ಗೃಹಬಳಕೆಯ ಎಲ್‌ ಪಿ ಜಿ ಮತ್ತು ಪಿ ಎನ್‌ ಜಿ ಗೆ ಅತ್ಯುನ್ನತ ಆದ್ಯತೆ ನೀಡಿದೆ.
  • ಸರ್ಕಾರವು ಈಗಾಗಲೇ ಪೂರೈಕೆ ಮತ್ತು ಬೇಡಿಕೆ ಎರಡೂ ಕಡೆಗಳಲ್ಲಿ ಹಲವಾರು ತರ್ಕಬದ್ಧಗೊಳಿಸುವ ಕ್ರಮಗಳನ್ನು ಜಾರಿಗೆ ತಂದಿದೆ, ಇದರಲ್ಲಿ ಸಂಸ್ಕರಣಾಗಾರ ಉತ್ಪಾದನೆಯನ್ನು ಹೆಚ್ಚಿಸುವುದು, ನಗರ ಪ್ರದೇಶಗಳಲ್ಲಿ ಬುಕ್ಕಿಂಗ್ ಮಧ್ಯಂತರವನ್ನು 21 ರಿಂದ 25 ದಿನಗಳಿಗೆ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ 45 ದಿನಗಳವರೆಗೆ ಹೆಚ್ಚಿಸುವುದು ಮತ್ತು ಪೂರೈಕೆಗಾಗಿ ವಲಯಗಳಿಗೆ ಆದ್ಯತೆ ನೀಡುವುದು ಸೇರಿದೆ.
  • ಎಲ್‌ ಪಿ ಜಿ ಬೇಡಿಕೆಯ ಮೇಲಿನ ಒತ್ತಡವನ್ನು ಕಡಿಮೆ ಮಾಡಲು ಸೀಮೆಎಣ್ಣೆ ಮತ್ತು ಕಲ್ಲಿದ್ದಲಿನಂತಹ ಪರ್ಯಾಯ ಇಂಧನ ಆಯ್ಕೆಗಳನ್ನು ನೀಡಲಾಗಿದೆ.
  • ಸಣ್ಣ, ಮಧ್ಯಮ ಮತ್ತು ಇತರ ಗ್ರಾಹಕರಿಗೆ ಕಲ್ಲಿದ್ದಲು ವಿತರಿಸಲು ರಾಜ್ಯಗಳಿಗೆ ಹೆಚ್ಚಿನ ಪ್ರಮಾಣದ ಕಲ್ಲಿದ್ದಲನ್ನು ಹಂಚಿಕೆ ಮಾಡಲು ಕಲ್ಲಿದ್ದಲು ಸಚಿವಾಲಯವು ಈಗಾಗಲೇ ಕೋಲ್ ಇಂಡಿಯಾ ಮತ್ತು ಸಿಂಗರೇಣಿ ಕಾಲಿಯರೀಸ್‌ ಗೆ ಆದೇಶ ಹೊರಡಿಸಿದೆ.
  • ಗೃಹಬಳಕೆಯ ಮತ್ತು ವಾಣಿಜ್ಯ ಗ್ರಾಹಕರಿಗೆ ಹೊಸ ಪಿ ಎನ್‌ ಜಿ ಸಂಪರ್ಕಗಳನ್ನು ಸುಗಮಗೊಳಿಸಲು ರಾಜ್ಯಗಳಿಗೆ ಸಲಹೆ ನೀಡಲಾಗಿದೆ.

ಸಾರ್ವಜನಿಕ ಸಲಹೆ:

  • ಪೆಟ್ರೋಲ್, ಡೀಸೆಲ್ ಮತ್ತು ಎಲ್‌ ಪಿ ಜಿ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ. ಪೆಟ್ರೋಲ್, ಡೀಸೆಲ್‌ ನ 'ಭೀತಿಯ ಖರೀದಿ' ಮತ್ತು ಎಲ್‌ ಪಿ ಜಿಯ ಅತಿಯಾದ ಬುಕ್ಕಿಂಗ್ ಅನ್ನು ತಪ್ಪಿಸಿ.
  • ವದಂತಿಗಳ ಬಗ್ಗೆ ಜಾಗರೂಕರಾಗಿರಿ ಮತ್ತು ಸರಿಯಾದ ಮಾಹಿತಿಗಾಗಿ ಅಧಿಕೃತ ಮೂಲಗಳನ್ನು ಅವಲಂಬಿಸಿ.
  • ಎಲ್‌ ಪಿ ಜಿ ಗಾಗಿ ನಾಗರಿಕರಲ್ಲಿ ವಿನಂತಿ –
    • ಬುಕ್ಕಿಂಗ್‌ ಗಳಿಗಾಗಿ ಡಿಜಿಟಲ್ ಮೋಡ್ ಬಳಸಿ.
    • ಎಲ್‌ ಪಿ ಜಿ ವಿತರಕರಿಗೆ ಭೇಟಿ ನೀಡುವುದನ್ನು ತಪ್ಪಿಸಿ.
  • ನಾಗರಿಕರು ಪಿ ಎನ್‌ ಜಿ, ಇಂಡಕ್ಷನ್/ಎಲೆಕ್ಟ್ರಿಕ್ ಸ್ಟೌವ್‌ ಗಳಂತಹ ಪರ್ಯಾಯ ಇಂಧನಗಳನ್ನು ಬಳಸಲು ವಿನಂತಿಸಲಾಗಿದೆ.
  • ಪ್ರಸ್ತುತ ಪರಿಸ್ಥಿತಿಯಲ್ಲಿ, ಎಲ್ಲಾ ನಾಗರಿಕರು ತಮ್ಮ ದೈನಂದಿನ ಬಳಕೆಯಲ್ಲಿ ಇಂಧನವನ್ನು ಉಳಿಸಲು ಅಗತ್ಯ ಪ್ರಯತ್ನಗಳನ್ನು ಮಾಡಲು ವಿನಂತಿಸಲಾಗಿದೆ.

ಕಡಲ ಸುರಕ್ಷತೆ ಮತ್ತು ಹಡಗು ಕಾರ್ಯಾಚರಣೆಗಳು

ಬಂದರುಗಳು, ಹಡಗು ಮತ್ತು ಜಲಮಾರ್ಗಗಳ ಸಚಿವಾಲಯದ ಮಾಹಿತಿಯಂತೆ ಈ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತೀಯ ಹಡಗುಗಳು ಮತ್ತು ನಾವಿಕರ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಚಿವಾಲಯದ ಪ್ರಕಾರ:

  • ಬಂದರುಗಳು, ಹಡಗು ಮತ್ತು ಜಲಮಾರ್ಗಗಳ ಸಚಿವಾಲಯವು ಹಡಗುಗಳ ಸಂಚಾರ, ಬಂದರು ಕಾರ್ಯಾಚರಣೆಗಳು ಮತ್ತು ಭಾರತೀಯ ನಾವಿಕರ ಸುರಕ್ಷತೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ, ಜೊತೆಗೆ ಕಡಲ ವ್ಯಾಪಾರದ ನಿರಂತರತೆಯನ್ನು ಖಚಿತಪಡಿಸಿಕೊಳ್ಳುತ್ತಿದೆ.
  • ಈ ಪ್ರದೇಶದಲ್ಲಿರುವ ಎಲ್ಲಾ ಭಾರತೀಯ ನಾವಿಕರು ಸುರಕ್ಷಿತವಾಗಿದ್ದಾರೆ; ಕಳೆದ 24 ಗಂಟೆಗಳಲ್ಲಿ ಭಾರತೀಯ ಧ್ವಜ ಹೊಂದಿರುವ ಹಡಗುಗಳಿಗೆ ಸಂಬಂಧಿಸಿದ ಯಾವುದೇ ಘಟನೆ ವರದಿಯಾಗಿಲ್ಲ.
  • 485 ಭಾರತೀಯ ನಾವಿಕರನ್ನು ಹೊಂದಿರುವ ಭಾರತೀಯ ಧ್ವಜದ 18 ಹಡಗುಗಳು ಪಶ್ಚಿಮ ಪರ್ಷಿಯನ್ ಗಲ್ಫ್ ಪ್ರದೇಶದಲ್ಲಿವೆ; ಹಡಗು ಮಹಾನಿರ್ದೇಶನಾಲಯವು, ಹಡಗು ಮಾಲೀಕರು, ಆರ್‌ ಪಿ ಎಸ್‌ ಎಲ್ ಏಜೆನ್ಸಿಗಳು ಮತ್ತು ಭಾರತೀಯ ಮಿಷನ್‌ ಗಳ ಸಮನ್ವಯದೊಂದಿಗೆ ಪರಿಸ್ಥಿತಿಯನ್ನು ಸಕ್ರಿಯವಾಗಿ ಮೇಲ್ವಿಚಾರಣೆ ಮಾಡುತ್ತಿದೆ.
  • ಹಡಗು ಮಹಾನಿರ್ದೇಶನಾಲಯದ ನಿಯಂತ್ರಣ ಕೊಠಡಿಯು 24x7 ಕಾರ್ಯನಿರ್ವಹಿಸುತ್ತಿದ್ದು, ಸಕ್ರಿಯಗೊಂಡ ನಂತರ 4699 ಕರೆಗಳನ್ನು ಮತ್ತು 9364 ಇಮೇಲ್‌ ಗಳನ್ನು ನಿರ್ವಹಿಸಿದೆ; ಕಳೆದ 24 ಗಂಟೆಗಳಲ್ಲಿ 144 ಕರೆಗಳು ಮತ್ತು 290 ಇಮೇಲ್‌ ಗಳನ್ನು ಸ್ವೀಕರಿಸಲಾಗಿದೆ.
  • ಹಡಗು ಮಹಾನಿರ್ದೇಶನಾಲಯ ಇದುವರೆಗೆ 959 ಕ್ಕೂ ಹೆಚ್ಚು ಭಾರತೀಯ ನಾವಿಕರ ಸುರಕ್ಷಿತ ವಾಪಸಾತಿಗೆ ಅನುಕೂಲ ಮಾಡಿಕೊಟ್ಟಿದೆ, ಇದರಲ್ಲಿ ಕಳೆದ 24 ಗಂಟೆಗಳಲ್ಲಿ 9 ಜನರು ಸೇರಿದ್ದಾರೆ.
  • ಭಾರತದಾದ್ಯಂತ ಬಂದರು ಕಾರ್ಯಾಚರಣೆಗಳು ಸಹಜವಾಗಿದ್ದು, ಯಾವುದೇ ದಟ್ಟಣೆ ಇಲ್ಲ; ಗುಜರಾತ್, ಮಹಾರಾಷ್ಟ್ರ, ಗೋವಾ, ಕೇರಳ, ಆಂಧ್ರಪ್ರದೇಶ ಮತ್ತು ಪುದುಚೇರಿಯ ರಾಜ್ಯ ಕಡಲ ಮಂಡಳಿಗಳು ಸುಗಮ ಕಾರ್ಯನಿರ್ವಹಣೆಯನ್ನು ಖಚಿತಪಡಿಸಿವೆ.
  • ನಾವಿಕರ ಕಲ್ಯಾಣ ಮತ್ತು ಅಡೆತಡೆಯಿಲ್ಲದ ಕಡಲ ಕಾರ್ಯಾಚರಣೆಗಳನ್ನು ಖಚಿತಪಡಿಸಿಕೊಳ್ಳಲು ಸಚಿವಾಲಯವು ವಿದೇಶಾಂಗ ವ್ಯವಹಾರಗಳ ಸಚಿವಾಲಯ, ಭಾರತೀಯ ಮಿಷನ್‌ ಗಳು ಮತ್ತು ಕಡಲ ಪಾಲುದಾರರೊಂದಿಗೆ ಸಮನ್ವಯವನ್ನು ಮುಂದುವರಿಸಿದೆ.

ಪ್ರದೇಶದಲ್ಲಿರುವ ಭಾರತೀಯ ಪ್ರಜೆಗಳ ಸುರಕ್ಷತೆ

ಈ ಪ್ರದೇಶದಲ್ಲಿರುವ ಭಾರತೀಯ ಸಮುದಾಯದೊಂದಿಗೆ ನಿರಂತರ ಸಂಪರ್ಕವನ್ನು ಹೊಂದಲಾಗಿದ್ದು, ಅಗತ್ಯ ನೆರವು ನೀಡಲಾಗುತ್ತಿದೆ ಮತ್ತು ಅವರ ಸುರಕ್ಷತೆ ಮತ್ತು ಕ್ಷೇಮಕ್ಕಾಗಿ ಸಲಹೆಗಳನ್ನು ನೀಡಲಾಗುತ್ತಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಮಾಹಿತಿಯಂತೆ:

  • ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನೆದರ್ಲ್ಯಾಂಡ್ಸ್ ಪ್ರಧಾನಿ ಗೌರವಾನ್ವಿತ ಶ್ರೀ ರೋಬ್ ಜೆಟೆನ್ ಅವರೊಂದಿಗೆ ಮಾತನಾಡಿ, ಭಾರತ-ನೆದರ್ಲ್ಯಾಂಡ್ಸ್ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವ ಮಾರ್ಗಗಳ ಬಗ್ಗೆ ಚರ್ಚಿಸಿದರು. ಸೆಮಿಕಂಡಕ್ಟರ್‌ ಗಳು, ಮೆಗಾ ಜಲ ಯೋಜನೆಗಳು, ಹಸಿರು ಹೈಡ್ರೋಜನ್ ಮತ್ತು ಪ್ರತಿಭೆಗಳ ಸಂಚಾರದಲ್ಲಿ ಸಹಕಾರದ ಸಾಮರ್ಥ್ಯವನ್ನು ಪ್ರಧಾನಿ ಎತ್ತಿ ತೋರಿಸಿದರು. ಇಬ್ಬರೂ ನಾಯಕರು ಪಶ್ಚಿಮ ಏಷ್ಯಾದ ಬಗ್ಗೆಯೂ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು ಮತ್ತು ಶಾಂತಿ ಮತ್ತು ಸ್ಥಿರತೆಯ ಶೀಘ್ರ ಮರುಸ್ಥಾಪನೆಯ ಅಗತ್ಯವನ್ನು ಒತ್ತಿಹೇಳಿದರು.
  • ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಗಲ್ಫ್ ಮತ್ತು ಪಶ್ಚಿಮ ಏಷ್ಯಾ ಪ್ರದೇಶದ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಭಾರತೀಯ ಸಮುದಾಯದ ಸುರಕ್ಷತೆ, ಭದ್ರತೆ ಮತ್ತು ಕಲ್ಯಾಣವು ಅತ್ಯುನ್ನತ ಆದ್ಯತೆಯಾಗಿದೆ.
  • ಸಮರ್ಪಿತ ವಿಶೇಷ ನಿಯಂತ್ರಣ ಕೊಠಡಿಯು ಕಾರ್ಯನಿರ್ವಹಿಸುತ್ತಿದೆ. ಮಾಹಿತಿಯನ್ನು ಹಂಚಿಕೊಳ್ಳಲು ಮತ್ತು ಪ್ರಯತ್ನಗಳನ್ನು ಸಂಘಟಿಸಲು ಸಚಿವಾಲಯವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳೊಂದಿಗೆ ನಿಯಮಿತ ಸಂಪರ್ಕದಲ್ಲಿದೆ.
  • ಈ ಪ್ರದೇಶದಾದ್ಯಂತ ಮಿಷನ್‌ ಗಳು ಮತ್ತು ಪೋಸ್ಟ್‌ ಗಳು ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತಿವೆ, 24x7 ಸಹಾಯವಾಣಿಗಳನ್ನು ನಡೆಸುತ್ತಿವೆ ಮತ್ತು ಭಾರತೀಯ ಸಮುದಾಯ, ಸಂಘಗಳು, ಸಂಸ್ಥೆಗಳು ಮತ್ತು ಕಂಪನಿಗಳೊಂದಿಗೆ ನಿಯಮಿತ ಸಂಪರ್ಕವನ್ನು ಕಾಯ್ದುಕೊಂಡಿವೆ. ನವೀಕರಿಸಿದ ಸಲಹೆಗಳನ್ನು ನಿಯಮಿತವಾಗಿ ಹೊರಡಿಸಲಾಗುತ್ತಿದೆ.
  • ಮಿಷನ್‌ ಗಳು ಸ್ಥಳೀಯ ಸರ್ಕಾರಗಳೊಂದಿಗೆ ನಿಕಟ ಸಂಪರ್ಕದಲ್ಲಿವೆ ಮತ್ತು ನಾವಿಕರು, ವಿದ್ಯಾರ್ಥಿಗಳು ಮತ್ತು ಭಾರತೀಯ ಪ್ರಜೆಗಳಿಗೆ ವೀಸಾ ಸೌಲಭ್ಯ, ದೂತಾವಾಸ ಸೇವೆಗಳು ಮತ್ತು ಲಾಜಿಸ್ಟಿಕಲ್ ಬೆಂಬಲದೊಂದಿಗೆ ಸಹಾಯ ಮಾಡುವುದನ್ನು ಮುಂದುವರಿಸಿವೆ.
  • ಫೆಬ್ರವರಿ 28 ರಿಂದ, ಸುಮಾರು 5,72,000 ಪ್ರಯಾಣಿಕರು ಈ ಪ್ರದೇಶದಿಂದ ಭಾರತಕ್ಕೆ ಮರಳಿದ್ದಾರೆ.
    • ಯುಎಇಯಲ್ಲಿ ಇಂದು ಸುಮಾರು 85 ವಿಮಾನಗಳು ಕಾರ್ಯನಿರ್ವಹಿಸುವ ನಿರೀಕ್ಷೆಯಿದೆ. ಕಾರ್ಯಾಚರಣೆ ಮತ್ತು ಸುರಕ್ಷತಾ ಪರಿಗಣನೆಗಳ ಆಧಾರದ ಮೇಲೆ ಸೀಮಿತ ಸಂಖ್ಯೆಯ ನಾನ್-ಷೆಡ್ಯೂಲ್ಡ್‌ ವಿಮಾನಗಳು ಮುಂದುವರಿಯುತ್ತಿವೆ.
    • ಒಮಾನ್ ಮತ್ತು ಸೌದಿ ಅರೇಬಿಯಾದಿಂದ ಭಾರತಕ್ಕೆ ವಿಮಾನಗಳು ಕಾರ್ಯನಿರ್ವಹಿಸುತ್ತಿವೆ.
    • ಕತಾರ್ ವಾಯುಪ್ರದೇಶ ಭಾಗಶಃ ಮುಕ್ತವಾಗಿದ್ದು, ಇಂದು ಸುಮಾರು 8-10 ನಾನ್-ಷೆಡ್ಯೂಲ್ಡ್‌ ವಾಣಿಜ್ಯ ವಿಮಾನಗಳು ಭಾರತಕ್ಕೆ ಕಾರ್ಯನಿರ್ವಹಿಸುವ ನಿರೀಕ್ಷೆಯಿದೆ.
    • ಕುವೈತ್ ಮತ್ತು ಬಹ್ರೇನ್ ವಾಯುಪ್ರದೇಶಗಳು ಮುಚ್ಚಲ್ಪಟ್ಟಿವೆ. ಸೌದಿ ಅರೇಬಿಯಾದ ದಮ್ಮಾಮ್ ವಿಮಾನ ನಿಲ್ದಾಣದಿಂದ ಭಾರತದ ವಿವಿಧ ಸ್ಥಳಗಳಿಗೆ ವಿಶೇಷ ನಾನ್-ಷೆಡ್ಯೂಲ್ಡ್‌ ವಾಣಿಜ್ಯ ವಿಮಾನಗಳು ಕಾರ್ಯನಿರ್ವಹಿಸುತ್ತಿವೆ.
    • ಇರಾನ್‌ ನಲ್ಲಿ ವಾಯುಪ್ರದೇಶ ಮುಚ್ಚಿರುವ ಹಿನ್ನೆಲೆಯಲ್ಲಿ, ಭಾರತೀಯ ಪ್ರಜೆಗಳ ಪ್ರಯಾಣವನ್ನು ಅರ್ಮೇನಿಯಾ ಮತ್ತು ಅಜೆರ್ಬೈಜಾನ್ ಮೂಲಕ ಸುಗಮಗೊಳಿಸಲಾಗುತ್ತಿದೆ.
    • ಇಸ್ರೇಲ್‌ ನಲ್ಲಿ ವಾಯುಪ್ರದೇಶ ನಿರ್ಬಂಧಗಳ ಹಿನ್ನೆಲೆಯಲ್ಲಿ, ಭಾರತೀಯ ಪ್ರಜೆಗಳ ಪ್ರಯಾಣವನ್ನು ಈಜಿಪ್ಟ್ ಮತ್ತು ಜೋರ್ಡಾನ್ ಮೂಲಕ ಸುಗಮಗೊಳಿಸಲಾಗುತ್ತಿದೆ.
    • ಇರಾಕ್‌ ನಲ್ಲಿ ವಾಯುಪ್ರದೇಶ ಮುಚ್ಚಿರುವ ಹಿನ್ನೆಲೆಯಲ್ಲಿ, ಭಾರತೀಯ ಪ್ರಜೆಗಳ ಪ್ರಯಾಣವನ್ನು ಜೋರ್ಡಾನ್ ಮತ್ತು ಸೌದಿ ಅರೇಬಿಯಾ ಮೂಲಕ ಸುಗಮಗೊಳಿಸಲಾಗುತ್ತಿದೆ.

 

******


(ಪ್ರಕಟಣೆ ಐ.ಡಿ.: 2247315) ವಿಸಿಟರ್ ಕೌಂಟರ್ : 12
ಪ್ರಕಟಣೆಯನ್ನು ಇದರಲ್ಲಿ ಓದಿ: हिन्दी , Khasi , English , Urdu , Marathi , Assamese , Bengali , Gujarati , Odia , Tamil , Telugu , Malayalam