ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ
ಪಶ್ಚಿಮ ಏಷ್ಯಾದ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಪ್ರಮುಖ ವಲಯಗಳ ಕುರಿತಾದ ಸುದ್ದಿಗೋಷ್ಠಿ
ಎಲ್ಪಿಜಿ ಕೊರತೆಯ ಯಾವುದೇ ವರದಿಗಳಿಲ್ಲ; ನಿನ್ನೆ 52.3 ಲಕ್ಷಕ್ಕೂ ಹೆಚ್ಚು ದೇಶೀಯ ಸಿಲಿಂಡರ್ಗಳನ್ನು ವಿತರಿಸಲಾಗಿದೆ
ಸಾರ್ವಜನಿಕ ವಲಯದ ಒಎಂಸಿಗಳಿಂದ ಆಕಸ್ಮಿಕ ತಪಾಸಣೆ ತೀವ್ರ; 219 ಎಲ್ಪಿಜಿ ವಿತರಕರಿಗೆ ದಂಡ, 56 ವಿತರಣಾ ಕೇಂದ್ರಗಳ ಅಮಾನತು
ಮಾರ್ಚ್ 2026 ರಿಂದ ಇದುವರೆಗೆ 4.24 ಲಕ್ಷಕ್ಕೂ ಹೆಚ್ಚು ಪಿಎನ್ಜಿ ಸಂಪರ್ಕಗಳಿಗೆ ಗ್ಯಾಸ್ ಪೂರೈಕೆ ಮತ್ತು 4.66 ಲಕ್ಷಕ್ಕೂ ಹೆಚ್ಚು ಗ್ರಾಹಕರು ಹೊಸ ಸಂಪರ್ಕಗಳಿಗಾಗಿ ನೋಂದಣಿ
ಭಾರತದಾದ್ಯಂತ ಬಂದರು ಕಾರ್ಯಾಚರಣೆಗಳು ಸಹಜವಾಗಿದ್ದು, ಯಾವುದೇ ದಟ್ಟಣೆ ವರದಿಯಾಗಿಲ್ಲ
ಈ ಪ್ರದೇಶದಲ್ಲಿರುವ ಭಾರತೀಯ ಸಮುದಾಯದ ಸುರಕ್ಷತೆ, ಭದ್ರತೆ ಮತ್ತು ಕಲ್ಯಾಣವನ್ನು ಖಚಿತಪಡಿಸಿಕೊಳ್ಳುವತ್ತ ಪ್ರಯತ್ನಗಳು ಕೇಂದ್ರೀಕೃತವಾಗಿವೆ
ಫೆಬ್ರವರಿ 28 ರಿಂದ ಈವರೆಗೆ ಸುಮಾರು 8.97 ಲಕ್ಷ ಪ್ರಯಾಣಿಕರು ಈ ಪ್ರದೇಶದಿಂದ ಭಾರತಕ್ಕೆ ಪ್ರಯಾಣಿಸಿದ್ದಾರೆ
ಪ್ರಕಟಣಾ ದಿನಾಂಕ:
12 APR 2026 4:51PM by PIB Bengaluru
ಪಶ್ಚಿಮ ಏಷ್ಯಾದಲ್ಲಿ ವಿಕಸನಗೊಳ್ಳುತ್ತಿರುವ ಪರಿಸ್ಥಿತಿಯ ಹಿನ್ನೆಲೆಯಲ್ಲಿ, ಭಾರತ ಸರ್ಕಾರವು ಬೆಳವಣಿಗೆಗಳನ್ನು ನಿಕಟವಾಗಿ ಗಮನಿಸುತ್ತಿದೆ ಮತ್ತು ನಿರ್ಣಾಯಕ ವಲಯಗಳಲ್ಲಿ ಸನ್ನದ್ಧತೆಯನ್ನು ಖಚಿತಪಡಿಸಿಕೊಳ್ಳಲು ಸಮನ್ವಯದ ಕ್ರಮಗಳನ್ನು ಕೈಗೊಳ್ಳುತ್ತಿದೆ. ಇಂಧನ ಪೂರೈಕೆ, ಕಡಲ ಕಾರ್ಯಾಚರಣೆಗಳು ಮತ್ತು ಈ ಪ್ರದೇಶದಲ್ಲಿರುವ ಭಾರತೀಯ ಪ್ರಜೆಗಳಿಗೆ ನೆರವು ನೀಡುವ ನಿಟ್ಟಿನಲ್ಲಿ ಕೈಗೊಳ್ಳಲಾಗುತ್ತಿರುವ ಕ್ರಮಗಳನ್ನು ಈ ಕೆಳಗಿನ ಮಾಹಿತಿ ವಿವರಿಸುತ್ತದೆ:
ಇಂಧನ ಪೂರೈಕೆ ಮತ್ತು ಇಂಧನ ಲಭ್ಯತೆ
ಹಾರ್ಮುಜ್ ಜಲಸಂಧಿಯ ಮೇಲೆ ಪರಿಣಾಮ ಬೀರುತ್ತಿರುವ ಬೆಳವಣಿಗೆಗಳ ನಡುವೆ ಪೆಟ್ರೋಲಿಯಂ ಉತ್ಪನ್ನಗಳು ಮತ್ತು ಎಲ್ಪಿಜಿಯ ನಿರಂತರ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಕೈಗೊಳ್ಳಲಾಗುತ್ತಿರುವ ಕ್ರಮಗಳ ಕುರಿತು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಅಪ್ಡೇಟ್ ಹಂಚಿಕೊಂಡಿದೆ. ಈ ಕೆಳಗಂಡವುಗಳನ್ನು ಗಮನಿಸಲಾಗಿದೆ:
ಸಾರ್ವಜನಿಕ ಸಲಹೆ ಮತ್ತು ನಾಗರಿಕರ ಜಾಗೃತಿ
- ಪೆಟ್ರೋಲ್, ಡೀಸೆಲ್ ಮತ್ತು ಎಲ್ಪಿಜಿಯ ಆತಂಕದ ಖರೀದಿಯನ್ನು ತಪ್ಪಿಸಲು ಮತ್ತು ಮಾಹಿತಿಗಾಗಿ ಅಧಿಕೃತ ಮೂಲಗಳನ್ನು ಮಾತ್ರ ಅವಲಂಬಿಸಲು ನಾಗರಿಕರಿಗೆ ಸಲಹೆ ನೀಡಲಾಗಿದೆ.
- ಎಲ್ಪಿಜಿ ಗ್ರಾಹಕರು ಡಿಜಿಟಲ್ ಬುಕ್ಕಿಂಗ್ ವೇದಿಕೆಗಳನ್ನು ಬಳಸಲು ಮತ್ತು ವಿತರಕರನ್ನು ಭೇಟಿ ಮಾಡುವುದನ್ನು ತಪ್ಪಿಸಲು ವಿನಂತಿಸಲಾಗಿದೆ.
- ಪಿಎನ್ಜಿ ಮತ್ತು ಎಲೆಕ್ಟ್ರಿಕ್ ಅಥವಾ ಇಂಡಕ್ಷನ್ ಕುಕ್ಟಾಪ್ಗಳಂತಹ ಪರ್ಯಾಯ ಇಂಧನಗಳನ್ನು ಬಳಸಲು ನಾಗರಿಕರನ್ನು ಪ್ರೋತ್ಸಾಹಿಸಲಾಗಿದೆ.
- ಪ್ರಸ್ತುತ ಪರಿಸ್ಥಿತಿಯಲ್ಲಿ ನಾಗರಿಕರು ತಮ್ಮ ದೈನಂದಿನ ಬಳಕೆಯಲ್ಲಿ ಇಂಧನವನ್ನು ಉಳಿಸಲು ವಿನಂತಿಸಲಾಗಿದೆ.
ಸರ್ಕಾರದ ಸಿದ್ಧತೆ ಮತ್ತು ಪೂರೈಕೆ ನಿರ್ವಹಣಾ ಕ್ರಮಗಳು
- ಪ್ರಸ್ತುತ ಭೌಗೋಳಿಕ ರಾಜಕೀಯ ಪರಿಸ್ಥಿತಿಯ ಹೊರತಾಗಿಯೂ, ಸರ್ಕಾರವು ದೇಶೀಯ ಎಲ್ಪಿಜಿ ಮತ್ತು ಪಿಎನ್ಜಿ ಪೂರೈಕೆಗೆ ಹಾಗೂ ಆಸ್ಪತ್ರೆಗಳು ಮತ್ತು ಶೈಕ್ಷಣಿಕ ಸಂಸ್ಥೆಗಳಿಗೆ ಅತ್ಯುನ್ನತ ಆದ್ಯತೆ ನೀಡಿದೆ.
- ಸರ್ಕಾರವು ಈಗಾಗಲೇ ಪೂರೈಕೆ ಮತ್ತು ಬೇಡಿಕೆ ಎರಡೂ ಕಡೆಗಳಲ್ಲಿ ಹಲವಾರು ತರ್ಕಬದ್ಧ ಕ್ರಮಗಳನ್ನು ಜಾರಿಗೆ ತಂದಿದೆ, ಇದರಲ್ಲಿ ರಿಫೈನರಿ ಉತ್ಪಾದನೆಯನ್ನು ಹೆಚ್ಚಿಸುವುದು, ಬುಕ್ಕಿಂಗ್ ಅವಧಿಯನ್ನು ನಗರ ಪ್ರದೇಶಗಳಲ್ಲಿ 21 ರಿಂದ 25 ದಿನಗಳಿಗೆ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ 45 ದಿನಗಳವರೆಗೆ ಹೆಚ್ಚಿಸುವುದು ಮತ್ತು ಪೂರೈಕೆಗಾಗಿ ವಲಯಗಳಿಗೆ ಆದ್ಯತೆ ನೀಡುವುದು ಸೇರಿದೆ.
- ಎಲ್ಪಿಜಿ ಬೇಡಿಕೆಯ ಮೇಲಿನ ಒತ್ತಡವನ್ನು ಕಡಿಮೆ ಮಾಡಲು ಸೀಮೆಎಣ್ಣೆ ಮತ್ತು ಕಲ್ಲಿದ್ದಲಿನಂತಹ ಪರ್ಯಾಯ ಇಂಧನಗಳನ್ನು ಲಭ್ಯವಾಗುವಂತೆ ಮಾಡಲಾಗಿದೆ.
- ಸಣ್ಣ ಮತ್ತು ಮಧ್ಯಮ ಗ್ರಾಹಕರಿಗೆ ವಿತರಿಸಲು ರಾಜ್ಯಗಳಿಗೆ ಹೆಚ್ಚುವರಿ ಕಲ್ಲಿದ್ದಲನ್ನು ಪೂರೈಸಲು ಕಲ್ಲಿದ್ದಲು ಸಚಿವಾಲಯವು ಕೋಲ್ ಇಂಡಿಯಾ ಮತ್ತು ಸಿಂಗರೇಣಿ ಕಾಲಿಯರೀಸ್ಗೆ ನಿರ್ದೇಶನ ನೀಡಿದೆ.
- ದೇಶೀಯ ಮತ್ತು ವಾಣಿಜ್ಯ ಗ್ರಾಹಕರಿಗೆ ಹೊಸ ಪಿಎನ್ಜಿ ಸಂಪರ್ಕಗಳನ್ನು ಸುಗಮಗೊಳಿಸಲು ರಾಜ್ಯಗಳಿಗೆ ಸಲಹೆ ನೀಡಲಾಗಿದೆ.
ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳೊಂದಿಗೆ ಸಮನ್ವಯದ ಪ್ರಯತ್ನಗಳು ಮತ್ತು ಸಾಂಸ್ಥಿಕ ಕಾರ್ಯವಿಧಾನಗಳು
- ಪೆಟ್ರೋಲಿಯಂ ಉತ್ಪನ್ನಗಳ ಸಂಗ್ರಹಣೆ ಮತ್ತು ಕಾಳಸಂತೆ ಮಾರಾಟದ ವಿರುದ್ಧ ಕ್ರಮ ಕೈಗೊಳ್ಳಲು ಅಗತ್ಯ ವಸ್ತುಗಳ ಕಾಯ್ದೆ, 1955 ಮತ್ತು ಎಲ್ಪಿಜಿ ನಿಯಂತ್ರಣ ಆದೇಶ, 2000 ರ ಅಡಿಯಲ್ಲಿ ರಾಜ್ಯ ಸರ್ಕಾರಗಳಿಗೆ ಅಧಿಕಾರ ನೀಡಲಾಗಿದೆ.
- ಭಾರತ ಸರ್ಕಾರವು 27.03.2026 ಮತ್ತು 02.04.2026 ರ ಪತ್ರಗಳ ಮೂಲಕ ಸಕ್ರಿಯ ಸಾರ್ವಜನಿಕ ಸಂವಹನದ ಅಗತ್ಯವನ್ನು ಒತ್ತಿಹೇಳಿದೆ. ಈ ಹಿನ್ನೆಲೆಯಲ್ಲಿ, 02.04.2026 ಮತ್ತು 06.04.2026 ರಂದು ಸಭೆಗಳನ್ನು ನಡೆಸಲಾಗಿದ್ದು, ಈ ಕೆಳಗಿನ ಅಂಶಗಳನ್ನು ಒತ್ತಿಹೇಳಲಾಗಿದೆ:
- ದೈನಂದಿನ ಪತ್ರಿಕಾಗೋಷ್ಠಿಗಳನ್ನು ನಡೆಸಲು ಮತ್ತು ನಿಯಮಿತ ಸಾರ್ವಜನಿಕ ಸಲಹೆಗಳನ್ನು ನೀಡಲು.
- ಸಾಮಾಜಿಕ ಮಾಧ್ಯಮಗಳಲ್ಲಿ ನಕಲಿ ಸುದ್ದಿ / ತಪ್ಪು ಮಾಹಿತಿಯನ್ನು ಸಕ್ರಿಯವಾಗಿ ಎದುರಿಸಲು.
- ಜಿಲ್ಲಾ ಆಡಳಿತದಿಂದ ದೈನಂದಿನ ಜಾರಿ ಕಾರ್ಯಾಚರಣೆಗಳನ್ನು ತೀವ್ರಗೊಳಿಸಲು ಮತ್ತು ಒಎಂಸಿಗಳ ಸಮನ್ವಯದೊಂದಿಗೆ ದಾಳಿಗಳನ್ನು ಮುಂದುವರಿಸಲು.
- ತಮ್ಮ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಲ್ಲಿ ವಾಣಿಜ್ಯ ಎಲ್ಪಿಜಿ ಹಂಚಿಕೆ ಆದೇಶಗಳನ್ನು ಹೊರಡಿಸಲು.
- ಹೆಚ್ಚುವರಿ ಸೀಮೆಎಣ್ಣೆಗಾಗಿ (SKO) ಹಂಚಿಕೆ ಆದೇಶಗಳನ್ನು ಹೊರಡಿಸಲು.
- ಪಿಎನ್ಜಿ ಅಳವಡಿಕೆ ಮತ್ತು ಪರ್ಯಾಯ ಇಂಧನಗಳನ್ನು ಉತ್ತೇಜಿಸಲು.
- ಎಲ್ಪಿಜಿ ಪೂರೈಕೆಗೆ ಆದ್ಯತೆ ನೀಡಲು ಮತ್ತು 5 ಕೆಜಿ ಎಫ್ಟಿಎಲ್ ಸಿಲಿಂಡರ್ಗಳ ಉದ್ದೇಶಿತ ವಿತರಣೆಯನ್ನು ಅಳವಡಿಸಿಕೊಳ್ಳಲು.
- ಎಲ್ಲಾ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳು ಕಾಳಸಂತೆ ಸಂಗ್ರಹಣೆ ತಡೆಯಲು ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಿವೆ.
- ಪ್ರಸ್ತುತ, 24 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳು ನಿಯಮಿತವಾಗಿ ಪತ್ರಿಕಾಗೋಷ್ಠಿಗಳನ್ನು ನಡೆಸುತ್ತಿವೆ.
ಜಾರಿ ಮತ್ತು ಮೇಲ್ವಿಚಾರಣಾ ಕ್ರಮಗಳು
- ಎಲ್ಪಿಜಿ ಕಾಳಸಂತೆ ಸಂಗ್ರಹಣೆ ತಡೆಯಲು ದೇಶಾದ್ಯಂತ ಜಾರಿ ಕ್ರಮಗಳು ಮುಂದುವರಿದಿವೆ. 11.04.2026 ರಂದು ದೇಶಾದ್ಯಂತ 2700 ಕ್ಕೂ ಹೆಚ್ಚು ದಾಳಿಗಳನ್ನು ನಡೆಸಲಾಗಿದೆ.
- ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳು ಆಕಸ್ಮಿಕ ತಪಾಸಣೆಗಳನ್ನು ಬಲಪಡಿಸಿದ್ದು, ಇಲ್ಲಿಯವರೆಗೆ 219 ಎಲ್ಪಿಜಿ ವಿತರಣಾ ಕೇಂದ್ರಗಳ ಮೇಲೆ ದಂಡ ವಿಧಿಸಿವೆ ಮತ್ತು 56 ವಿತರಣಾ ಕೇಂದ್ರಗಳನ್ನು ಅಮಾನತುಗೊಳಿಸಿವೆ.
ಎಲ್ಪಿಜಿ ಪೂರೈಕೆ
ದೇಶೀಯ ಎಲ್ಪಿಜಿ ಪೂರೈಕೆ ಸ್ಥಿತಿ:
- ಚಾಲ್ತಿಯಲ್ಲಿರುವ ಭೌಗೋಳಿಕ ರಾಜಕೀಯ ಪರಿಸ್ಥಿತಿಯಿಂದ ಎಲ್ಪಿಜಿ ಪೂರೈಕೆಯ ಮೇಲೆ ಪರಿಣಾಮ ಮುಂದುವರಿದಿದೆ.
- ಎಲ್ಪಿಜಿ ವಿತರಣಾ ಕೇಂದ್ರಗಳಲ್ಲಿ ಯಾವುದೇ ಕೊರತೆ (Dry-outs) ವರದಿಯಾಗಿಲ್ಲ.
- ಆನ್ಲೈನ್ ಎಲ್ಪಿಜಿ ಬುಕ್ಕಿಂಗ್ಗಳು ಉದ್ಯಮದಾದ್ಯಂತ ಸುಮಾರು ಶೇ. 98 ಕ್ಕೆ ಏರಿವೆ.
- ಪಥ ಬದಲಾವಣೆಯನ್ನು ತಡೆಯಲು ಡೆಲಿವರಿ ಅಥೆಂಟಿಕೇಶನ್ ಕೋಡ್ (DAC) ಆಧಾರಿತ ವಿತರಣೆಗಳು ಸುಮಾರು ಶೇ. 93 ಕ್ಕೆ ಏರಿವೆ.
- ದೇಶೀಯ ಎಲ್ಪಿಜಿ ಸಿಲಿಂಡರ್ ವಿತರಣೆಗಳು ಸಹಜವಾಗಿವೆ.
- 11.04.2026 ರಂದು 52.3 ಲಕ್ಷಕ್ಕೂ ಹೆಚ್ಚು ದೇಶೀಯ ಎಲ್ಪಿಜಿ ಸಿಲಿಂಡರ್ಗಳನ್ನು ವಿತರಿಸಲಾಗಿದೆ.
ವಾಣಿಜ್ಯ ಎಲ್ಪಿಜಿ ಪೂರೈಕೆ ಮತ್ತು ಹಂಚಿಕೆ ಕ್ರಮಗಳು:
- ಒಟ್ಟು ವಾಣಿಜ್ಯ ಎಲ್ಪಿಜಿ ಹಂಚಿಕೆಯನ್ನು ಬಿಕ್ಕಟ್ಟಿನ ಮುಂಚಿನ ಮಟ್ಟದ ಶೇ. 70 ಕ್ಕೆ ಹೆಚ್ಚಿಸಲಾಗಿದೆ, ಇದರಲ್ಲಿ ಶೇ. 10 ರಷ್ಟು ಸುಧಾರಣೆ-ಆಧಾರಿತ ಹಂಚಿಕೆಯೂ ಸೇರಿದೆ.
- ಭಾರತ ಸರ್ಕಾರವು 06.04.2026 ರ ಪತ್ರದ ಮೂಲಕ ವಲಸೆ ಕಾರ್ಮಿಕರಿಗೆ ವಿತರಿಸಲು ಪ್ರತಿ ರಾಜ್ಯದಲ್ಲಿ ಲಭ್ಯವಿರುವ 5 ಕೆಜಿ ಎಫ್ಟಿಎಲ್ (FTL) ಸಿಲಿಂಡರ್ಗಳ ದೈನಂದಿನ ಪ್ರಮಾಣವನ್ನು ದ್ವಿಗುಣಗೊಳಿಸಿದೆ. ಇದು 2026 ರ ಮಾರ್ಚ್ 2 ಮತ್ತು 3 ರ ಅವಧಿಯಲ್ಲಿ ವಲಸೆ ಕಾರ್ಮಿಕರಿಗೆ ಪೂರೈಸಲಾದ ಸರಾಸರಿ ದೈನಂದಿನ ಪೂರೈಕೆಯ ಆಧಾರದ ಮೇಲೆ ಮತ್ತು 21.03.2026 ರ ಪತ್ರದಲ್ಲಿ ತಿಳಿಸಲಾದ ಶೇ. 20 ರ ಮಿತಿಗಿಂತ ಹೆಚ್ಚಾಗಿರುತ್ತದೆ. ಈ 5 ಕೆಜಿ ಎಫ್ಟಿಎಲ್ ಸಿಲಿಂಡರ್ಗಳು ಆಯಾ ರಾಜ್ಯ ಸರ್ಕಾರಗಳ ವಿಲೇವಾರಿಯಲ್ಲಿದ್ದು, ತೈಲ ಮಾರುಕಟ್ಟೆ ಕಂಪನಿಗಳ (OMCs) ನೆರವಿನೊಂದಿಗೆ ರಾಜ್ಯದ ವಲಸೆ ಕಾರ್ಮಿಕರಿಗೆ ಮಾತ್ರ ಪೂರೈಸಲಾಗುತ್ತದೆ.
- ಸಾರ್ವಜನಿಕ ವಲಯದ ಒಎಂಸಿಗಳು ಕಳೆದ 8 ದಿನಗಳಲ್ಲಿ 5 ಕೆಜಿ ಎಫ್ಟಿಎಲ್ ಸಿಲಿಂಡರ್ಗಳಿಗಾಗಿ ಸುಮಾರು 3300 ಜಾಗೃತಿ ಶಿಬಿರಗಳನ್ನು ಆಯೋಜಿಸಿದ್ದು, ಅದರಲ್ಲಿ 35,800 ಕ್ಕೂ ಹೆಚ್ಚು 5 ಕೆಜಿ ಎಫ್ಟಿಎಲ್ ಸಿಲಿಂಡರ್ಗಳು ಮಾರಾಟವಾಗಿವೆ.
- 11.04.2026 ರಂದು ದೇಶಾದ್ಯಂತ 1 ಲಕ್ಷಕ್ಕೂ ಹೆಚ್ಚು 5 ಕೆಜಿ ಎಫ್ಟಿಎಲ್ ಸಿಲಿಂಡರ್ಗಳು ಮಾರಾಟವಾಗಿವೆ. ಇದು ಫೆಬ್ರವರಿ 2026 ರ ಸರಾಸರಿ ದೈನಂದಿನ 77,000 ಮಾರಾಟಕ್ಕೆ ಹೋಲಿಸಿದರೆ ಗಮನಾರ್ಹ ಹೆಚ್ಚಳವಾಗಿದೆ.
- 23 ಮಾರ್ಚ್ 2026 ರಿಂದ ಇದುವರೆಗೆ 13 ಲಕ್ಷಕ್ಕೂ ಹೆಚ್ಚು 5-ಕೆಜಿ ಫ್ರೀ ಟ್ರೇಡ್ ಎಲ್ಪಿಜಿ ಸಿಲಿಂಡರ್ಗಳನ್ನು ಮಾರಾಟ ಮಾಡಲಾಗಿದೆ.
- ಐಒಸಿಎಲ್ (IOCL), ಎಚ್ಪಿಸಿಎಲ್ (HPCL) ಮತ್ತು ಬಿಪಿಸಿಎಲ್ (BPCL) ಕಂಪನಿಗಳ ಕಾರ್ಯನಿರ್ವಾಹಕ ನಿರ್ದೇಶಕರ ಮೂವರು ಸದಸ್ಯರ ಸಮಿತಿಯು ವಾಣಿಜ್ಯ ಎಲ್ಪಿಜಿ ವಿತರಣೆಯನ್ನು ಯೋಜಿಸಲು ರಾಜ್ಯ ಅಧಿಕಾರಿಗಳು ಮತ್ತು ಕೈಗಾರಿಕಾ ಸಂಸ್ಥೆಗಳೊಂದಿಗೆ ಸಮನ್ವಯ ಸಾಧಿಸುತ್ತಿದೆ.
- ಮಾರ್ಚ್ 14, 2026 ರಿಂದ ಇದುವರೆಗೆ ಒಟ್ಟು 1,20,898 ಮೆಟ್ರಿಕ್ ಟನ್ (ಇದು 63.6 ಲಕ್ಷಕ್ಕೂ ಹೆಚ್ಚು 19-ಕೆಜಿ ಸಿಲಿಂಡರ್ಗಳಿಗೆ ಸಮಾನವಾಗಿದೆ) ವಾಣಿಜ್ಯ ಎಲ್ಪಿಜಿ ಮಾರಾಟವಾಗಿದೆ.
- 11.04.2026 ರಂದು 7665 ಮೆಟ್ರಿಕ್ ಟನ್ ವಾಣಿಜ್ಯ ಎಲ್ಪಿಜಿ (ಇದು 4 ಲಕ್ಷಕ್ಕೂ ಹೆಚ್ಚು 19-ಕೆಜಿ ಸಿಲಿಂಡರ್ಗಳಿಗೆ ಸಮಾನವಾಗಿದೆ) ಮಾರಾಟವಾಗಿದೆ.
ನೈಸರ್ಗಿಕ ಅನಿಲ ಪೂರೈಕೆ ಮತ್ತು ಪಿಎನ್ಜಿ ವಿಸ್ತರಣಾ ಉಪಕ್ರಮಗಳು
- ದೇಶೀಯ ಪಿಎನ್ಜಿ ಮತ್ತು ಸಿಎನ್ಜಿ ಸಾರಿಗೆಗೆ ಶೇ. 100 ರಷ್ಟು ಪೂರೈಕೆಯನ್ನು ನೀಡುವ ಮೂಲಕ ಗ್ರಾಹಕರಿಗೆ ಆದ್ಯತೆ ನೀಡಲಾಗಿದೆ.
- ಲಭ್ಯವಿರುವ ದಾಸ್ತಾನು ಮತ್ತು ನಿಗದಿತ ಎಲ್ಎನ್ಜಿ ಕಾರ್ಗೋ ಆಗಮನದ ಆಧಾರದ ಮೇಲೆ, ರಸಗೊಬ್ಬರ ಘಟಕಗಳಿಗೆ ಒಟ್ಟಾರೆ ಅನಿಲ ಹಂಚಿಕೆಯನ್ನು ಮತ್ತೆ ಶೇಕಡಾ 5 ರಷ್ಟು ಹೆಚ್ಚಿಸಲಾಗಿದ್ದು, 09.04.2026 ರಿಂದ ಜಾರಿಗೆ ಬರುವಂತೆ ಅವುಗಳ ಆರು ತಿಂಗಳ ಸರಾಸರಿ ಬಳಕೆಯ ಸುಮಾರು ಶೇಕಡಾ 95 ಕ್ಕೆ ತಲುಪಿಸಲಾಗಿದೆ.
- ವಾಣಿಜ್ಯ ಎಲ್ಪಿಜಿ ಲಭ್ಯತೆಯ ಬಗ್ಗೆ ಇರುವ ಕಾಳಜಿಗಳನ್ನು ಪರಿಹರಿಸಲು ಹೋಟೆಲ್ಗಳು, ರೆಸ್ಟೋರೆಂಟ್ಗಳು ಮತ್ತು ಕ್ಯಾಂಟೀನ್ಗಳಂತಹ ವಾಣಿಜ್ಯ ಸಂಸ್ಥೆಗಳಿಗೆ ಪಿಎನ್ಜಿ ಸಂಪರ್ಕ ನೀಡಲು ಆದ್ಯತೆ ನೀಡುವಂತೆ ಸಿಜಿಡಿ (CGD) ಘಟಕಗಳಿಗೆ ಸಲಹೆ ನೀಡಲಾಗಿದೆ.
- ಐಜಿಎಲ್, ಎಂಜಿಎಲ್, ಗೇಲ್ ಗ್ಯಾಸ್ ಮತ್ತು ಬಿಪಿಸಿಎಲ್ ಸೇರಿದಂತೆ ಸಿಜಿಡಿ ಕಂಪನಿಗಳು ದೇಶೀಯ ಮತ್ತು ವಾಣಿಜ್ಯ ಪಿಎನ್ಜಿ ಸಂಪರ್ಕಗಳಿಗಾಗಿ ಪ್ರೋತ್ಸಾಹಕಗಳನ್ನು ನೀಡುತ್ತಿವೆ.
- ಸಿಜಿಡಿ ನೆಟ್ವರ್ಕ್ಗಳ ವಿಸ್ತರಣೆಗೆ ಅಗತ್ಯವಿರುವ ಅನುಮೋದನೆಗಳನ್ನು ತ್ವರಿತಗೊಳಿಸುವಂತೆ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳು ಮತ್ತು ಕೇಂದ್ರ ಸಚಿವಾಲಯಗಳನ್ನು ವಿನಂತಿಸಲಾಗಿದೆ.
- ಎಲ್ಪಿಜಿಯಿಂದ ಪಿಎನ್ಜಿಗೆ ದೀರ್ಘಕಾಲೀನ ಪರಿವರ್ತನೆಗೆ ಸಹಾಯ ಮಾಡಬಹುದಾದರೆ ಎಲ್ಲಾ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ ಹೆಚ್ಚುವರಿ ಶೇಕಡಾ 10 ರಷ್ಟು ವಾಣಿಜ್ಯ ಎಲ್ಪಿಜಿ ಹಂಚಿಕೆ ಮಾಡುವುದಾಗಿ ಭಾರತ ಸರ್ಕಾರವು 18.03.2026 ರ ಪತ್ರದ ಮೂಲಕ ತಿಳಿಸಿದೆ.
- 21 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳು ಈಗಾಗಲೇ ಪಿಎನ್ಜಿ ವಿಸ್ತರಣಾ ಸುಧಾರಣೆಗಳಿಗೆ ಸಂಬಂಧಿಸಿದ ಹೆಚ್ಚುವರಿ ವಾಣಿಜ್ಯ ಎಲ್ಪಿಜಿ ಹಂಚಿಕೆಯನ್ನು ಪಡೆಯುತ್ತಿವೆ.
- ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಅರ್ಜಿಗಳನ್ನು ಆದ್ಯತೆಯ ಮೇಲೆ ಪ್ರಕ್ರಿಯೆಗೊಳಿಸಲು ಮೂರು ತಿಂಗಳ ಅವಧಿಗೆ ಸಿಜಿಡಿ ಮೂಲಸೌಕರ್ಯಕ್ಕಾಗಿ "ವೇಗವರ್ಧಿತ ಅನುಮೋದನೆ ಚೌಕಟ್ಟು" (Accelerated Approval Framework) ಅನ್ನು ಅಳವಡಿಸಿಕೊಂಡಿದೆ.
- ಭಾರತ ಸರ್ಕಾರವು 24.03.2026 ರ ಗೆಜೆಟ್ ಮೂಲಕ ಅಗತ್ಯ ವಸ್ತುಗಳ ಕಾಯ್ದೆ, 1955 ರ ಅಡಿಯಲ್ಲಿ 'ನೈಸರ್ಗಿಕ ಅನಿಲ ಮತ್ತು ಪೆಟ್ರೋಲಿಯಂ ಉತ್ಪನ್ನಗಳ ವಿತರಣಾ (ಪೈಪ್ಲೈನ್ಗಳ ಹಾಕುವಿಕೆ, ನಿರ್ಮಾಣ, ಕಾರ್ಯಾಚರಣೆ ಮತ್ತು ವಿಸ್ತರಣೆಯ ಮೂಲಕ) ಆದೇಶ, 2026' ಅನ್ನು ಸೂಚಿಸಿದೆ. ಈ ಆದೇಶವು ದೇಶಾದ್ಯಂತ ಪೈಪ್ಲೈನ್ಗಳನ್ನು ಹಾಕಲು ಮತ್ತು ವಿಸ್ತರಿಸಲು ಸುವ್ಯವಸ್ಥಿತ ಮತ್ತು ಕಾಲಮಿತಿಯ ಚೌಕಟ್ಟನ್ನು ಒದಗಿಸುತ್ತದೆ. ಇದು ಅನುಮೋದನೆಗಳು ಮತ್ತು ಭೂಮಿಯ ಲಭ್ಯತೆಯಲ್ಲಿನ ವಿಳಂಬಗಳನ್ನು ಪರಿಹರಿಸುತ್ತದೆ ಮತ್ತು ವಸತಿ ಪ್ರದೇಶಗಳು ಸೇರಿದಂತೆ ನೈಸರ್ಗಿಕ ಅನಿಲ ಮೂಲಸೌಕರ್ಯಗಳ ವೇಗದ ಅಭಿವೃದ್ಧಿಯನ್ನು ಶಕ್ತಗೊಳಿಸುತ್ತದೆ. ಇದು ಪಿಎನ್ಜಿ ನೆಟ್ವರ್ಕ್ ಬೆಳವಣಿಗೆಯನ್ನು ವೇಗಗೊಳಿಸುತ್ತದೆ, ಕೊನೆಯ ಮೈಲಿ ಸಂಪರ್ಕವನ್ನು ಹೆಚ್ಚಿಸುತ್ತದೆ ಮತ್ತು ಇಂಧನ ಭದ್ರತೆಯನ್ನು ಬಲಪಡಿಸುವ ಮೂಲಕ ಸ್ವಚ್ಛ ಇಂಧನಗಳತ್ತ ಪರಿವರ್ತನೆಯನ್ನು ಬೆಂಬಲಿಸುತ್ತದೆ ಎಂದು ನಿರೀಕ್ಷಿಸಲಾಗಿದೆ.
- ಪಿಎನ್ಜಿ ವಿಸ್ತರಣೆಯಲ್ಲಿನ ವೇಗವನ್ನು ಉಳಿಸಿಕೊಳ್ಳಲು ಪಿಎನ್ಜಿಆರ್ಬಿ (PNGRB) ರಾಷ್ಟ್ರೀಯ ಪಿಎನ್ಜಿ ಅಭಿಯಾನ (National PNG Drive) 2.0 ಅನ್ನು 30 ಜೂನ್ 2026 ರವರೆಗೆ ವಿಸ್ತರಿಸಿದೆ.
- ಸ್ವಚ್ಛವಾದ, ಹೆಚ್ಚು ಸುರಕ್ಷಿತ ಮತ್ತು ಸ್ವಾವಲಂಬಿ ಇಂಧನ ಭವಿಷ್ಯವನ್ನು ಉತ್ತೇಜಿಸಲು, ಭಾರತ ಸರ್ಕಾರವು ಮಾದರಿ ಕರಡು ರಾಜ್ಯ ಸಿಬಿಜಿ (CBG) ನೀತಿಯನ್ನು ಅಭಿವೃದ್ಧಿಪಡಿಸಿದೆ. ಈ ಮಾದರಿ ನೀತಿಯು ರಾಜ್ಯಗಳು ಸಿಬಿಜಿ ಅಭಿವೃದ್ಧಿಗಾಗಿ ತಮ್ಮದೇ ಆದ ಹೂಡಿಕೆದಾರ ಸ್ನೇಹಿ ಮತ್ತು ಅನುಷ್ಠಾನ ಆಧಾರಿತ ಪರಿಸರ ವ್ಯವಸ್ಥೆಯನ್ನು ರಚಿಸಲು ಸಹಾಯ ಮಾಡುವ ಸಮಗ್ರ ಮಾರ್ಗದರ್ಶಿ ಚೌಕಟ್ಟಾಗಿ ಕಾರ್ಯನಿರ್ವಹಿಸುತ್ತದೆ. ಇದನ್ನು ಆರಿಸಿಕೊಳ್ಳುವ ರಾಜ್ಯಗಳಿಗೆ ಮುಂದಿನ ಹಂತದ ಹೆಚ್ಚುವರಿ ವಾಣಿಜ್ಯ ಎಲ್ಪಿಜಿ ಹಂಚಿಕೆಯಲ್ಲಿ ಆದ್ಯತೆ ನೀಡಲಾಗುವುದು.
- ಮಾರ್ಚ್ 2026 ರಿಂದ ಸುಮಾರು 4.24 ಲಕ್ಷ ಪಿಎನ್ಜಿ ಸಂಪರ್ಕಗಳಿಗೆ ಅನಿಲ ಪೂರೈಸಲಾಗಿದೆ ಮತ್ತು ಸುಮಾರು 4.66 ಲಕ್ಷ ಹೆಚ್ಚುವರಿ ಗ್ರಾಹಕರು ಹೊಸ ಸಂಪರ್ಕಗಳಿಗಾಗಿ ನೋಂದಾಯಿಸಿಕೊಂಡಿದ್ದಾರೆ.
- ಇಂದಿನವರೆಗೆ 26,000 ಕ್ಕೂ ಹೆಚ್ಚು ಪಿಎನ್ಜಿ ಗ್ರಾಹಕರು MYPNGD.in ವೆಬ್ಸೈಟ್ ಮೂಲಕ ತಮ್ಮ ಎಲ್ಪಿಜಿ ಸಂಪರ್ಕಗಳನ್ನು ಹಿಂತಿರುಗಿಸಿದ್ದಾರೆ.
ಕಚ್ಚಾ ತೈಲ ಸ್ಥಿತಿ ಮತ್ತು ರಿಫೈನರಿ ಕಾರ್ಯಾಚರಣೆಗಳು
-
- ಎಲ್ಲಾ ರಿಫೈನರಿಗಳು (ಸಂಸ್ಕರಣಾಗಾರಗಳು) ಸಮರ್ಪಕ ಕಚ್ಚಾ ತೈಲ ದಾಸ್ತಾನುಗಳೊಂದಿಗೆ ಹೆಚ್ಚಿನ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸುತ್ತಿವೆ, ಹಾಗೆಯೇ ಪೆಟ್ರೋಲ್ ಮತ್ತು ಡೀಸೆಲ್ನ ಸಾಕಷ್ಟು ದಾಸ್ತಾನುಗಳನ್ನು ಕಾಯ್ದುಕೊಳ್ಳಲಾಗುತ್ತಿದೆ.
- ದೇಶೀಯ ಬಳಕೆಯನ್ನು ಬೆಂಬಲಿಸಲು ರಿಫೈನರಿಗಳಿಂದ ಉತ್ಪಾದನೆಯಾಗುವ ಎಲ್ಪಿಜಿ ಪ್ರಮಾಣವನ್ನು ಹೆಚ್ಚಿಸಲಾಗಿದೆ.
- ಔಷಧೀಯ ಇಲಾಖೆ, ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ, ರಾಸಾಯನಿಕ ಮತ್ತು ಪೆಟ್ರೋಕೆಮಿಕಲ್ಸ್ ಇಲಾಖೆ ಮುಂತಾದ ನಿರ್ಣಾಯಕ ವಲಯಗಳಿಗೆ, ಸೆಂಟರ್ ಫಾರ್ ಹೈ ಟೆಕ್ನಾಲಜಿ (CHT) ನಿರ್ಧರಿಸಿದ ನಿರ್ದಿಷ್ಟ ಪ್ರಮಾಣ ಮತ್ತು ರಿಫೈನರಿ ಮೂಲದ ಆಧಾರದ ಮೇಲೆ C3 ಮತ್ತು C4 ಸ್ಟ್ರೀಮ್ಗಳ ಕೆಲವು ಕನಿಷ್ಠ ಪ್ರಮಾಣವನ್ನು ಲಭ್ಯವಾಗುವಂತೆ ಮಾಡಲು ಭಾರತದ ಪೆಟ್ರೋಕೆಮಿಕಲ್ ಸಂಕೀರ್ಣಗಳು ಸೇರಿದಂತೆ ರಿಫೈನಿಂಗ್ ಕಂಪನಿಗಳಿಗೆ ಭಾರತ ಸರ್ಕಾರವು 01.04.2026 ರ ಆದೇಶದ ಮೂಲಕ ಅನುಮತಿ ನೀಡಿದೆ.
ಚಿಲ್ಲರೆ ಇಂಧನ ಲಭ್ಯತೆ ಮತ್ತು ಬೆಲೆ ಕ್ರಮಗಳು
- ದೇಶಾದ್ಯಂತ ಇರುವ ಚಿಲ್ಲರೆ ಮಾರಾಟ ಮಳಿಗೆಗಳು ಸಹಜವಾಗಿ ಕಾರ್ಯನಿರ್ವಹಿಸುತ್ತಿವೆ.
- ಮಧ್ಯಪ್ರಾಚ್ಯ ಬಿಕ್ಕಟ್ಟು ಕಚ್ಚಾ ತೈಲ ಬೆಲೆಯಲ್ಲಿ ಅಸಹಜ ಹೆಚ್ಚಳಕ್ಕೆ ಕಾರಣವಾಗಿದೆ; ಆದಾಗ್ಯೂ, ಗ್ರಾಹಕರನ್ನು ರಕ್ಷಿಸಲು ಭಾರತ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ಗೆ 10 ರೂ. ಕಡಿತಗೊಳಿಸಿದೆ.
- ದೇಶೀಯ ಮಾರುಕಟ್ಟೆಯಲ್ಲಿ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಭಾರತ ಸರ್ಕಾರವು 11.04.2026 ರ ಗೆಜೆಟ್ ಅಧಿಸೂಚನೆಯ ಮೂಲಕ ಡೀಸೆಲ್ ಮೇಲಿನ ರಫ್ತು ಲೆವಿಯನ್ನು ಪ್ರತಿ ಲೀಟರ್ಗೆ 55.50 ರೂ. ಗೆ ಮತ್ತು ಎಟಿಎಫ್ (ATF) ಮೇಲಿನ ಲೆವಿಯನ್ನು ಪ್ರತಿ ಲೀಟರ್ಗೆ 42 ರೂ. ಗೆ ಹೆಚ್ಚಿಸಿದೆ.
- ಪೆಟ್ರೋಲ್ ಮತ್ತು ಡೀಸೆಲ್ನ ಚಿಲ್ಲರೆ ಬೆಲೆಗಳು ಬದಲಾಗದೆ ಸ್ಥಿರವಾಗಿವೆ ಮತ್ತು ಚಿಲ್ಲರೆ ಮಾರಾಟ ಮಳಿಗೆಗಳಲ್ಲಿ ಯಾವುದೇ ಬೆಲೆ ಏರಿಕೆಯಾಗಿಲ್ಲ.
ಸೀಮೆಎಣ್ಣೆ ಲಭ್ಯತೆ ಮತ್ತು ವಿತರಣಾ ಕ್ರಮಗಳು
- ನಿಯಮಿತ ಹಂಚಿಕೆಯ ಜೊತೆಗೆ 48,000 ಕೆಎಲ್ (KL) ಸೀಮೆಎಣ್ಣೆಯ ಹೆಚ್ಚುವರಿ ಹಂಚಿಕೆಯನ್ನು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ ಒದಗಿಸಲಾಗಿದೆ.
- 18 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳು ಎಸ್ಕೆಒ ಹಂಚಿಕೆ ಆದೇಶಗಳನ್ನು ಹೊರಡಿಸಿವೆ, ಆದರೆ ಹಿಮಾಚಲ ಪ್ರದೇಶ ಮತ್ತು ಲಡಾಖ್ ಯಾವುದೇ ಅಗತ್ಯವಿಲ್ಲ ಎಂದು ತಿಳಿಸಿವೆ.
ಕಡಲ ಸುರಕ್ಷತೆ ಮತ್ತು ಹಡಗು ಕಾರ್ಯಾಚರಣೆಗಳು
ಬಂದರುಗಳು, ಹಡಗು ಮತ್ತು ಜಲಮಾರ್ಗಗಳ ಸಚಿವಾಲಯವು ಈ ಪ್ರದೇಶದಲ್ಲಿ ಕಾರ್ಯಾಚರಿಸುತ್ತಿರುವ ಭಾರತೀಯ ಹಡಗುಗಳು ಮತ್ತು ನಾವಿಕರನ್ನು ರಕ್ಷಿಸಲು ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಸಚಿವಾಲಯವು ಹೀಗೆ ತಿಳಿಸಿದೆ:
- ಈ ಪ್ರದೇಶದಲ್ಲಿರುವ ಎಲ್ಲಾ ಭಾರತೀಯ ನಾವಿಕರು ಸುರಕ್ಷಿತವಾಗಿದ್ದಾರೆ ಮತ್ತು ಕಳೆದ 24 ಗಂಟೆಗಳಲ್ಲಿ ಭಾರತದ ಧ್ವಜ ಹೊಂದಿರುವ ಹಡಗುಗಳಿಗೆ ಸಂಬಂಧಿಸಿದ ಯಾವುದೇ ಅಹಿತಕರ ಘಟನೆ ವರದಿಯಾಗಿಲ್ಲ.
- ಶಿಪ್ಪಿಂಗ್ ನಿಯಂತ್ರಣ ಕೊಠಡಿಯು ದಿನದ 24 ಗಂಟೆಯೂ (24x7) ಕಾರ್ಯನಿರ್ವಹಿಸುತ್ತಿದೆ ಮತ್ತು ಇದುವರೆಗೆ 6,053 ಕರೆಗಳು ಹಾಗೂ 12,787 ಕ್ಕೂ ಹೆಚ್ಚು ಇಮೇಲ್ಗಳನ್ನು ನಿರ್ವಹಿಸಿದೆ. ಕಳೆದ 24 ಗಂಟೆಗಳಲ್ಲಿ 80 ಕರೆಗಳು ಮತ್ತು 112 ಇಮೇಲ್ಗಳನ್ನು ಸ್ವೀಕರಿಸಲಾಗಿದೆ.
- ಶಿಪ್ಪಿಂಗ್ ಮಹಾನಿರ್ದೇಶನಾಲಯದ (DG Shipping) ಮೂಲಕ ಸಚಿವಾಲಯವು ಇದುವರೆಗೆ ಗಲ್ಫ್ ಪ್ರದೇಶದ ವಿವಿಧ ಸ್ಥಳಗಳಿಂದ 2,084 ಕ್ಕೂ ಹೆಚ್ಚು ಭಾರತೀಯ ನಾವಿಕರನ್ನು ಸುರಕ್ಷಿತವಾಗಿ ಸ್ವದೇಶಕ್ಕೆ ಕರೆತರಲು ಅನುಕೂಲ ಮಾಡಿಕೊಟ್ಟಿದೆ, ಇದರಲ್ಲಿ ಕಳೆದ 24 ಗಂಟೆಗಳಲ್ಲಿ ಬಂದ 75 ನಾವಿಕರು ಸೇರಿದ್ದಾರೆ.
- ಭಾರತದಾದ್ಯಂತ ಬಂದರು ಕಾರ್ಯಾಚರಣೆಗಳು ಸಹಜವಾಗಿ ಮುಂದುವರಿದಿವೆ ಮತ್ತು ಯಾವುದೇ ದಟ್ಟಣೆ ವರದಿಯಾಗಿಲ್ಲ.
- ನಾವಿಕರ ಕಲ್ಯಾಣ ಮತ್ತು ಅಡೆತಡೆಯಿಲ್ಲದ ಕಡಲ ಕಾರ್ಯಾಚರಣೆಗಳನ್ನು ಖಚಿತಪಡಿಸಿಕೊಳ್ಳಲು ಸಚಿವಾಲಯವು ವಿದೇಶಾಂಗ ವ್ಯವಹಾರಗಳ ಸಚಿವಾಲಯ, ಭಾರತೀಯ ಮಿಷನ್ಗಳು ಮತ್ತು ಕಡಲ ಪಾಲುದಾರರೊಂದಿಗೆ ಸಮನ್ವಯ ಸಾಧಿಸುವುದನ್ನು ಮುಂದುವರಿಸಿದೆ.
ಈ ಪ್ರದೇಶದಲ್ಲಿರುವ ಭಾರತೀಯ ಪ್ರಜೆಗಳ ಸುರಕ್ಷತೆ
ಈ ಪ್ರದೇಶದಾದ್ಯಂತ ಭಾರತೀಯ ರಾಯಭಾರ ಕಚೇರಿಗಳು ಮತ್ತು ಪೋಸ್ಟ್ಗಳು ಭಾರತೀಯ ಸಮುದಾಯದೊಂದಿಗೆ ನಿಕಟ ಸಂಪರ್ಕದಲ್ಲಿದ್ದು, ಅವರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ನಿರಂತರ ನೆರವು ಮತ್ತು ಅಗತ್ಯ ಸೂಚನೆ ನೀಡುವುದನ್ನು ಮುಂದುವರಿಸುತ್ತಿವೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯವು ತಿಳಿಸಿದಂತೆ:
- ಸರ್ಕಾರವು ಗಲ್ಫ್ ಮತ್ತು ಪಶ್ಚಿಮ ಏಷ್ಯಾ ಪ್ರದೇಶದ ಬೆಳವಣಿಗೆಗಳನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡುವುದನ್ನು ಮುಂದುವರಿಸಿದೆ.
- ಮಾಹಿತಿ ಹಂಚಿಕೆ ಮತ್ತು ಉತ್ತಮ ಸಮನ್ವಯಕ್ಕಾಗಿ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳೊಂದಿಗೆ ನಿಯಮಿತ ಸಂಪರ್ಕದಲ್ಲಿದೆ.
- ಈ ಪ್ರದೇಶದಲ್ಲಿರುವ ಭಾರತೀಯ ಸಮುದಾಯದ ಸುರಕ್ಷತೆ, ಭದ್ರತೆ ಮತ್ತು ಕಲ್ಯಾಣವನ್ನು ಖಚಿತಪಡಿಸಿಕೊಳ್ಳುವತ್ತ ಪ್ರಯತ್ನಗಳು ಕೇಂದ್ರೀಕೃತವಾಗಿವೆ.
- ಭಾರತೀಯ ಮಿಷನ್ಗಳು ಮತ್ತು ಪೋಸ್ಟ್ಗಳು ದಿನದ 24 ಗಂಟೆಯೂ (24x7) ಸಹಾಯವಾಣಿಗಳನ್ನು ನಿರ್ವಹಿಸುತ್ತಿವೆ ಮತ್ತು ಭಾರತೀಯ ಪ್ರಜೆಗಳಿಗೆ ಸಕ್ರಿಯವಾಗಿ ಸಹಾಯ ಮಾಡುತ್ತಿವೆ.
- ಸ್ಥಳೀಯ ಸರ್ಕಾರದ ಮಾರ್ಗಸೂಚಿಗಳು, ವಿಮಾನ ಮತ್ತು ಪ್ರಯಾಣದ ಪರಿಸ್ಥಿತಿಗಳು ಹಾಗೂ ಕಾನ್ಸುಲರ್ ಸೇವೆಗಳ ಮಾಹಿತಿಯನ್ನು ಒಳಗೊಂಡ ನವೀಕೃತ ಸಲಹೆಗಳನ್ನು ನಿಯಮಿತವಾಗಿ ನೀಡಲಾಗುತ್ತಿದೆ.
- ನಮ್ಮ ಮಿಷನ್ಗಳು ಈ ಪ್ರದೇಶದಲ್ಲಿರುವ ಭಾರತೀಯ ಸಮುದಾಯ ಸಂಘಗಳು, ವೃತ್ತಿಪರ ಗುಂಪುಗಳು, ಭಾರತೀಯ ಕಂಪನಿಗಳು ಮತ್ತು ಇತರ ಪಾಲುದಾರರೊಂದಿಗೆ ಸಕ್ರಿಯವಾಗಿ ತೊಡಗಿಸಿಕೊಂಡಿವೆ.
- ವಾಯುಪ್ರದೇಶ ಮುಕ್ತವಾಗಿರುವ ದೇಶಗಳಿಂದ ವಿಮಾನಗಳು ಕಾರ್ಯನಿರ್ವಹಿಸುತ್ತಿವೆ. ಫೆಬ್ರವರಿ 28 ರಿಂದ ಈವರೆಗೆ ಸುಮಾರು 8,97,000 ಪ್ರಯಾಣಿಕರು ಈ ಪ್ರದೇಶದಿಂದ ಭಾರತಕ್ಕೆ ಪ್ರಯಾಣಿಸಿದ್ದಾರೆ.
- ಯುಎಇನಲ್ಲಿ (UAE), ವಿಮಾನಯಾನ ಸಂಸ್ಥೆಗಳು ಕಾರ್ಯಾಚರಣೆ ಮತ್ತು ಸುರಕ್ಷತಾ ಪರಿಗಣನೆಗಳ ಆಧಾರದ ಮೇಲೆ ಯುಎಇ ಮತ್ತು ಭಾರತದ ನಡುವೆ ಸೀಮಿತ ನಿಗದಿತವಲ್ಲದ ವಾಣಿಜ್ಯ ವಿಮಾನಗಳನ್ನು ಓಡಿಸುತ್ತಿವೆ, ಇಂದು ಸುಮಾರು 95 ವಿಮಾನಗಳನ್ನು ನಿರೀಕ್ಷಿಸಲಾಗಿದೆ.
- ಸೌದಿ ಅರೇಬಿಯಾ ಮತ್ತು ಓಮನ್ನ ವಿವಿಧ ವಿಮಾನ ನಿಲ್ದಾಣಗಳಿಂದ ಭಾರತದ ವಿವಿಧ ಸ್ಥಳಗಳಿಗೆ ವಿಮಾನಗಳು ಕಾರ್ಯನಿರ್ವಹಿಸುತ್ತಿವೆ.
- ಕತಾರ್ ವಾಯುಪ್ರದೇಶವು ಭಾಗಶಃ ಮುಕ್ತವಾಗಿರುವುದರಿಂದ, ಕತಾರ್ ಏರ್ವೇಸ್ ಇಂದು ಭಾರತಕ್ಕೆ ಸುಮಾರು 8-10 ವಿಮಾನಗಳನ್ನು ಓಡಿಸುವ ನಿರೀಕ್ಷೆಯಿದೆ.
- ಕುವೈತ್ ವಾಯುಪ್ರದೇಶವು ಮುಚ್ಚಲ್ಪಟ್ಟಿದೆ. ಕುವೈತ್ನ ಜಜೀರಾ ಏರ್ವೇಸ್ ಮತ್ತು ಕುವೈತ್ ಏರ್ವೇಸ್ ಸೌದಿ ಅರೇಬಿಯಾದ ದಮ್ಮಾಮ್ ವಿಮಾನ ನಿಲ್ದಾಣದಿಂದ ಭಾರತಕ್ಕೆ ನಿಗದಿತವಲ್ಲದ ವಾಣಿಜ್ಯ ವಿಮಾನಗಳನ್ನು ಓಡಿಸುತ್ತಿವೆ. ಕುವೈತ್ನಿಂದ ಬರುವ ಭಾರತೀಯ ಪ್ರಜೆಗಳ ಪ್ರಯಾಣವನ್ನು ಸೌದಿ ಅರೇಬಿಯಾದ ಮೂಲಕ ಸುಗಮಗೊಳಿಸಲಾಗುತ್ತಿದೆ.
- ಬಹ್ರೇನ್ ವಾಯುಪ್ರದೇಶವು ಮುಕ್ತವಾಗಿದೆ. ಗಲ್ಫ್ ಏರ್ ಶೀಘ್ರದಲ್ಲೇ ಬಹ್ರೇನ್ನಿಂದ ಭಾರತಕ್ಕೆ ಸೀಮಿತ ವಿಮಾನ ಕಾರ್ಯಾಚರಣೆಯನ್ನು ಆರಂಭಿಸಲು ಯೋಜಿಸುತ್ತಿದೆ ಮತ್ತು ಪ್ರಸ್ತುತ ಸೌದಿ ಅರೇಬಿಯಾದ ದಮ್ಮಾಮ್ ವಿಮಾನ ನಿಲ್ದಾಣದಿಂದ ಭಾರತಕ್ಕೆ ನಿಗದಿತವಲ್ಲದ ವಿಮಾನಗಳನ್ನು ಓಡಿಸುತ್ತಿದೆ. ಬಹ್ರೇನ್ನಿಂದ ಬರುವ ಭಾರತೀಯ ಪ್ರಜೆಗಳ ಪ್ರಯಾಣವನ್ನು ಸೌದಿ ಅರೇಬಿಯಾದ ಮೂಲಕ ಭಾರತಕ್ಕೆ ಸುಗಮಗೊಳಿಸಲಾಗುತ್ತಿದೆ.
- ಇರಾನ್ ವಾಯುಪ್ರದೇಶವು ಮುಚ್ಚಲ್ಪಟ್ಟಿದೆ. ಭಾರತೀಯ ಪ್ರಜೆಗಳ ಪ್ರಯಾಣವನ್ನು ಅರ್ಮೇನಿಯಾ ಮತ್ತು ಅಜೆರ್ಬೈಜಾನ್ ಮೂಲಕ ಭಾರತಕ್ಕೆ ಸುಗಮಗೊಳಿಸುವುದನ್ನು ನಾವು ಮುಂದುವರಿಸಿದ್ದೇವೆ.ಇಸ್ರೇಲ್ ವಾಯುಪ್ರದೇಶವು ಮುಚ್ಚಲ್ಪಟ್ಟಿದೆ. ಭಾರತೀಯ ಪ್ರಜೆಗಳ ಪ್ರಯಾಣವನ್ನು ಜೋರ್ಡಾನ್ ಮತ್ತು ಈಜಿಪ್ಟ್ ಮೂಲಕ ಭಾರತಕ್ಕೆ ಸುಗಮಗೊಳಿಸಲಾಗುತ್ತಿದೆ.
- ಇರಾಕ್ ವಾಯುಪ್ರದೇಶವು ಸೀಮಿತ ವಿಮಾನ ಕಾರ್ಯಾಚರಣೆಗಳೊಂದಿಗೆ ಮುಕ್ತವಾಗಿದೆ. ಭಾರತೀಯ ಪ್ರಜೆಗಳ ಪ್ರಯಾಣವನ್ನು ಜೋರ್ಡಾನ್ ಮತ್ತು ಸೌದಿ ಅರೇಬಿಯಾ ಮೂಲಕ ಭಾರತಕ್ಕೆ ಸುಗಮಗೊಳಿಸಲಾಗುತ್ತಿದೆ.
*****
(ಪ್ರಕಟಣೆ ಐ.ಡಿ.: 2251379)
ವಿಸಿಟರ್ ಕೌಂಟರ್ : 12
ಪ್ರಕಟಣೆಯನ್ನು ಇದರಲ್ಲಿ ಓದಿ:
Odia
,
English
,
Urdu
,
Marathi
,
हिन्दी
,
Assamese
,
Bengali
,
Bengali-TR
,
Gujarati
,
Tamil
,
Telugu
,
Malayalam